
ಬೆಂಗಳೂರು: ‘ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ರಾಜ್ಯದಲ್ಲಿ 25 ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲೆಗಳನ್ನು ಮುಚ್ಚಲಾಗುತ್ತಿದೆ’ ಎಂದು ಎಡ ವಿದ್ಯಾರ್ಥಿಗಳ ಸಂಘಟನೆಗಳ ಪ್ರತಿಭಟನಾ ಸಮಾವೇಶದಲ್ಲಿ ಆರೋಪಿಸಲಾಯಿತು.
ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಉಪಾಧ್ಯಕ್ಷ ವಿ.ಎನ್. ರಾಜಶೇಖರ ಮಾತನಾಡಿ, ‘ಎಲ್ಲರಿಗೂ ಶಿಕ್ಷಣ ಸಿಗಬೇಕೆಂಬ ಉದ್ದೇಶದಿಂದ ಹಳ್ಳಿ-ಹಳ್ಳಿಗಳಲ್ಲಿ ಸರ್ಕಾರಿ ಶಾಲೆಗಳನ್ನು ಪ್ರಾರಂಭಿಸಲಾಗಿದೆ. ಇದರ ವಿರುದ್ಧವಾಗಿ ಕೆಪಿಎಸ್ ಶಾಲೆ ಹೆಸರಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವುದು ಖಂಡನೀಯ. ಕಾಂಗ್ರೆಸ್ಸಿನ ರಾಜೀವ್ ಗಾಂಧಿ ಸರ್ಕಾರದ 1986 ಶಿಕ್ಷಣ ನೀತಿಯಿಂದ ಹಿಡಿದು ಬಿಜೆಪಿಯ ಮೋದಿ ಸರ್ಕಾರದ ರೂಪಿಸಿ ಶಿಕ್ಷಣ ನೀತಿ ಬಂಡವಾಳಿಗರ ಲಾಭದ ಸರಕಾಗಿಸುವ ಹುನ್ನಾರ’ ಎಂದು ದೂರಿದರು.
ಕರ್ನಾಟಕ ರಾಜ್ಯ ಅಕ್ಷರ ದಾಸೋಹ ಸಂಘಟನೆಯ (ಸಿಐಟಿಯು) ರಾಜ್ಯ ಕಾರ್ಯದರ್ಶಿ ಮಾಲಿನಿ ಮೇಸ್ತ ಮಾತನಾಡಿ. ‘ಕೆಪಿಎಸ್ ಮ್ಯಾಗ್ನೆಟ್ ಹೆಸರಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚಿದರೆ, ಲಕ್ಷಾಂತರ ವಿದ್ಯಾರ್ಥಿಗಳು ಶಾಲೆಯಿಂದ ಹೊರಗುಳಿಯುವ ಅಪಾಯ ಇದೆ’ ಎಂದು ಆಂತಕ ವ್ಯಕ್ತಪಡಿಸಿದರು.
ರಾಜ್ಯದಾದ್ಯಂತ ಎಲ್ಲ ತಾಲ್ಲೂಕು, ಹಳ್ಳಿಗಳಲ್ಲಿ ವಿದ್ಯಾರ್ಥಿ ಸಂಘಟನೆಗಳು ಸರ್ಕಾರಿ ಶಾಲೆಗಳನ್ನು ಉಳಿಸಿ ಎಂಬ ಹೋರಾಟ ಕೈಗೊಳ್ಳಬೇಕು. ಬಜೆಟ್ ಅಧಿವೇಶನದ ಪೂರ್ವದಲ್ಲಿ ಎಲ್ಲಾ ಎಡ ವಿದ್ಯಾರ್ಥಿ ಸಂಘಟನೆಗಳಿಂದ ಬೃಹತ್ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳುವುದು. ರಾಜ್ಯ ಸರ್ಕಾರವು ಎಡಿಬಿಯಿಂದ ಪಡೆದಿರುವ ಸಾಲ ಮತ್ತು ಷರತ್ತುಗಳನ್ನು ಸಾರ್ಜನಿಕವಾಗಿ ಬಹಿರಂಗಪಡಿಸಬೇಕು. ಸರ್ಕಾರಿ ಶಾಲೆಗಳನ್ನು ಬಲಪಡಿಸಬೇಕು. ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ಹಿಂಪಡೆಯುವುದಾಗಿ ಬಜೆಟ್ ಭಾಷಣದಲ್ಲಿ ಘೋಷಿಸಬೇಕು ಎಂದು ಒತ್ತಾಯಿಸುವ ನಿರ್ಣಯಗಳನ್ನು ಕೈಗೊಳ್ಳಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.