ADVERTISEMENT

ಯುಪಿಎಸ್‌ಸಿ ಮಾದರಿಯಲ್ಲಿ ಕೆಪಿಎಸ್‌ಸಿ ಪರೀಕ್ಷೆ ನಡೆಯಲಿ: ಮೂಡ್ನಾಕೂಡು

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2024, 16:22 IST
Last Updated 2 ಸೆಪ್ಟೆಂಬರ್ 2024, 16:22 IST
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಮರು ಪರೀಕ್ಷೆ ನಡೆಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸೋಮವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು –ಪ್ರಜಾವಾಣಿ ಚಿತ್ರ
ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಮರು ಪರೀಕ್ಷೆ ನಡೆಸಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಸೋಮವಾರ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಯಿತು –ಪ್ರಜಾವಾಣಿ ಚಿತ್ರ   

ಬೆಂಗಳೂರು: ‘ಯುಪಿಎಸ್‌ಸಿ ಪರೀಕ್ಷೆಗಳು ಇವತ್ತಿಗೂ ಭ್ರಷ್ಟಾಚಾರರಹಿತವಾಗಿ ನಡೆಯುತ್ತಿವೆ. ಅದೇ ಮಾದರಿಯಲ್ಲಿ ಕೆಪಿಎಸ್‌ಸಿ ಪರೀಕ್ಷೆಗಳನ್ನು ನಡೆಸಬೇಕು’ ಎಂದು ಕವಿ ಮೂಡ್ನಾಕೂಡು ಚಿನ್ನಸ್ವಾಮಿ ಒತ್ತಾಯಿಸಿದರು.

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ನಡೆದ ಪರೀಕ್ಷೆಯ ಕನ್ನಡ ಪ್ರಶ್ನೆಪತ್ರಿಕೆಯಲ್ಲಿ ತಪ್ಪುಗಳೇ ತುಂಬಿದ್ದರಿಂದ ಮರು ಪರೀಕ್ಷೆ ನಡೆಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸೋಮವಾರ ಸ್ವಾತಂತ್ರ್ಯ ಉದ್ಯಾನದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು.

‘ದೇಶದಾದ್ಯಂತ ಭ್ರಷ್ಟಾಚಾರ ತಾಂಡವವಾಡುತ್ತಿದೆ. ಇದರ ಮಧ್ಯೆ ಯುಪಿಎಸ್‌ಸಿ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸುತ್ತಿದೆ’ ಎಂದರು.

ADVERTISEMENT

ಇನ್‌ಸೈಟ್ಸ್‌ ಐಎಎಸ್‌ ಸಂಸ್ಥಾಪಕ ಜಿ.ಬಿ. ವಿನಯಕುಮಾರ್‌ ಮಾತನಾಡಿ, ‘ಮರು ಪರೀಕ್ಷೆ ನಡೆಸಲು ಸೂಚನೆ ನೀಡಿರುವುದು ಉತ್ತಮ ನಿರ್ಧಾರ. ಆದರೆ, ಅಷ್ಟು ಸಾಲದು. ಕೆಪಿಎಸ್‌ಸಿಯ ಎಲ್ಲ ಭ್ರಷ್ಟ ಸದಸ್ಯರನ್ನು ಕಿತ್ತುಹಾಕಬೇಕು. ಪ್ರಾಮಾಣಿಕತೆ ಮತ್ತು ಅರ್ಹತೆ ಇರುವವರನ್ನು ನೇಮಿಸುವ ಮೂಲಕ ಆಮೂಲಾಗ್ರ ಬದಲಾವಣೆ ಮಾಡಬೇಕು’ ಎಂದು ಆಗ್ರಹಿಸಿದರು.

ನಟ ಚೇತನ್ ಅಹಿಂಸಾ, ವಕೀಲ ಹರಿರಾಮ್, ಅಕ್ಕ ಕೋಚಿಂಗ್ ಸೆಂಟರ್‌ನ ಶಿವಕುಮಾರ್, ಟಾಪರ್ಸ್ ಅಕಾಡೆಮಿಯ ಶಿವಕುಮಾರ್ ಹುಲುಮನಿ, ಕರವೇ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಸಣ್ಣೀರಪ್ಪ, ಉಪಾಧ್ಯಕ್ಷ ಡಿ.ಪಿ. ಅಂಜನಪ್ಪ, ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್, ಮುನಿಸ್ವಾಮಿ ಮಾತನಾಡಿದರು.

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗೆ ಮರು ಪರೀಕ್ಷೆ ನಡೆಸಲು ಮುಖ್ಯಮಂತ್ರಿ ಸೂಚನೆ ನೀಡಿರುವುದು ಕರವೇ ನಡೆಸಿದ ಹೋರಾಟಕ್ಕೆ ಸಿಕ್ಕ ಜಯ
ಟಿ.ಎ. ನಾರಾಯಣ ಗೌಡ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.