ಬೆಂಗಳೂರು: ಲೋಕಸೇವಾ ಆಯೋಗ ಕನ್ನಡಿಗರಿಗೆ ಅನ್ಯಾಯವಾಗುವ ರೀತಿಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ರೂಪಿಸುತ್ತಿದ್ದು, ಇದರಿಂದ ಅನ್ಯ ಭಾಷಿಕರು ಉದ್ಯೋಗ ಗಿಟ್ಟಿಸುತ್ತಿದ್ದಾರೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಜಿ.ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಲೋಕಸೇವಾ ಆಯೋಗಕ್ಕೆ ಸೋಮವಾರ ಭೇಟಿ ನೀಡಿ ಕನ್ನಡ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.
ವೃಂದದ ನೇಮಕಾತಿಗೆ ಸಂಬಂಧಿಸಿದಂತೆ ಪ್ರಶ್ನೆ ಪತ್ರಿಕೆಗಳನ್ನು ಸರಿಯಾಗಿ ರೂಪಿಸುತ್ತಿಲ್ಲ. ನಿಯಮಗಳನ್ನು ಪಾಲಿಸದೇ 4 ಮತ್ತು 7 ನೇ ತರಗತಿ ಗುಣಮಟ್ಟದ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸಲಾಗುತ್ತಿದೆ. ಪ್ರಶ್ನೆ ಪತ್ರಿಕೆಗಳಲ್ಲಿ ಆಯ್ಕೆಯ ಉತ್ತರಗಳನ್ನು ಗುರುತು ಮಾಡುವುದಕ್ಕೆ ಬದಲಾಗಿ, ಕನ್ನಡದಲ್ಲಿ ಪ್ರಬಂಧ ಬರೆಯಲು ಅವಕಾಶ ನೀಡಬೇಕು. ಇದರಿಂದ ಕನ್ನಡಿಗರೇ ಆಯ್ಕೆ ಆಗುತ್ತಾರೆ ಎಂದು ಹೇಳಿದರು.
ಮರಾಠಿ ಭಾಷೆಯಲ್ಲಿ ವ್ಯಾಸಂಗ ಮಾಡಿದ ಅಭ್ಯರ್ಥಿಯೊಬ್ಬರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಯ್ಕೆಯಾದರು. ಇದೇ ರೀತಿ ತಮಿಳು, ತೆಲುಗು ಮತ್ತು ಮಲೆಯಾಳ ಭಾಷೆಗಳ ಅಭ್ಯರ್ಥಿಗಳು ಆಯ್ಕೆಯಾಗುವ ಸಾಧ್ಯತೆ ಹೆಚ್ಚು ಎಂದು ಸಿದ್ದರಾಮಯ್ಯ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.