ಬೆಂಗಳೂರು: ‘ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ ನಿಗಮದಲ್ಲಿ (ಕೆಪಿಟಿಸಿಎಲ್) ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವ ಅರೆಕಾಲಿಕ ಸಫಾಯಿ ಕರ್ಮಚಾರಿಗಳನ್ನು ಕಾಯಂ ಮಾಡಿಕೊಳ್ಳಬೇಕು’ ಎಂದು ರಾಷ್ಟ್ರೀಯ ಸಫಾಯಿ ಕರ್ಮಚಾರಿಗಳ ಆಯೋಗದ ಸದಸ್ಯ ಜಗದೀಶ್ ಹಿರೇಮನಿ ಒತ್ತಾಯಿಸಿದರು.
ಕೆಪಿಟಿಸಿಎಲ್ನಲ್ಲಿ ನಡೆದ ಅರೆಕಾಲಿಕ ಸಫಾಯಿ ಕರ್ಮಚಾರಿಗಳ ಕಾಯಂ ಸಭೆಯಲ್ಲಿ ಅವರು ಮಾತನಾಡಿದರು.
‘ದಿನವಿಡೀ ಕೆಲಸ ಮಾಡುವ ಸಫಾಯಿ ಕರ್ಮಚಾರಿಗಳಿಗೆ ಕನಿಷ್ಠ ಕೂಲಿ ನಿಗದಿಪಡಿಸಬೇಕು. ಈಗಾಗಲೇ ಕೆಲವರು 10, 15 ವರ್ಷ ಸೇವೆ ಸಲ್ಲಿಸಿದ್ದಾರೆ. ಅದೇ ರೀತಿ ಬೆಸ್ಕಾಂನಲ್ಲೂ ಅರೆಕಾಲಿಕ ನೌಕರರಿದ್ದಾರೆ. ಬೆಸ್ಕಾಂ ಮತ್ತು ಕೆಪಿಟಿಸಿಎಲ್ ಒಟ್ಟು 270 ಮಂದಿಯನ್ನು ಪೂರ್ಣಾವಧಿ ನೌಕರರನ್ನಾಗಿ ನೇಮಕ ಮಾಡಿಕೊಳ್ಳಬೇಕು’ ಎಂದು ಆಗ್ರಹಿಸಿದರು.
ಕೆಪಿಟಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಎಸ್.ಸೆಲ್ವಕುಮಾರ್, ‘ಈ ಮೊದಲು 300 ಮಂದಿಯನ್ನು ಕಾಯಂಗೊಳಿಸಲಾಗಿದೆ. ಉಳಿದ ಅರೆಕಾಲಿಕ ನೌಕರರನ್ನು ಕಾಯಂ ಮಾಡುವಂತೆ ಎರಡು ಬಾರಿ ಸಲ್ಲಿಸಿರುವ ಪ್ರಸ್ತಾವನೆಯನ್ನು ಸರ್ಕಾರ ತಿರಸ್ಕರಿಸಿದೆ. ಮತ್ತೊಮ್ಮೆ ಈ ಬಗ್ಗೆ ಮನವಿ ಸಲ್ಲಿಸುತ್ತೇನೆ’ ಎಂದು ಭರವಸೆ ನೀಡಿದರು.
ಕೆಪಿಟಿಸಿಎಲ್ ಆಡಳಿತ ಮತ್ತು ಮಾನವ ಸಂಪನ್ಮೂಲ ನಿರ್ದೇಶಕ ಎಚ್.ಎನ್.ಗೋಪಾಲಕೃಷ್ಣ, ರಾಜ್ಯ ಸಫಾಯಿ ಕರ್ಮಚಾರಿ ಇಲಾಖೆ ಉಪನಿರ್ದೇಶಕ ಮಂಜುನಾಥ್, ಉಪಪ್ರಧಾನ ವ್ಯವಸ್ಥಾಪಕ ವಿ.ಟಿ.ರಮೇಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.