ADVERTISEMENT

ಕಚೇರಿಗೆ ಗೈರು: ತಹಶೀಲ್ದಾರ್‌ ಅಮಾನತು

​ಪ್ರಜಾವಾಣಿ ವಾರ್ತೆ
Published 18 ಜೂನ್ 2019, 19:44 IST
Last Updated 18 ಜೂನ್ 2019, 19:44 IST
ಜಿಲ್ಲಾಧಿಕಾರಿ ಬಳಿ ಜನರು ಅಳಲು ತೋಡಿಕೊಂಡರು
ಜಿಲ್ಲಾಧಿಕಾರಿ ಬಳಿ ಜನರು ಅಳಲು ತೋಡಿಕೊಂಡರು   

ಕೆ.ಆರ್.ಪುರ: ಕೆ.ಆರ್.ಪುರ ತಹಶೀಲ್ದಾರ್ ಕಚೇರಿ, ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ನಗರ ಜಿಲ್ಲಾಧಿಕಾರಿ ಬಿ.ಎಂ. ವಿಜಯಶಂಕರ್ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಚೇರಿಗೆ ನಿಗದಿತ ಸಮಯದಲ್ಲಿ ಹಾಜರಾಗದ ಹಿನ್ನೆಲೆಯಲ್ಲಿ ಗ್ರೇಡ್ 2 ತಹಶೀಲ್ದಾರ್ ಎಸ್.ಶಾರದಾ ಅವರನ್ನು ಅಮಾನತುಗೊಳಿಸಲು ಆದೇಶಿಸಿದರು. ಸಾರ್ವಜನಿಕ ಆಸ್ಪತ್ರೆಯಲ್ಲಿ ಅವಧಿ ಮೀರಿದ ಔಷಧಿಗಳನ್ನು ವಶಕ್ಕೆ ಪಡೆದು ಇಬ್ಬರು ಫಾರ್ಮಸಿಸ್ಟ್‌ಗಳನ್ನು ಅಮಾನತುಗೊಳಿಸುವಂತೆ ಸೂಚಿಸಿದರು. ಚುನಾವಣೆ ಶಾಖೆ, ಅಟಲ್‌ಜಿ ಜನಸ್ನೇಹಿ ಕೇಂದ್ರ, ಸಾಮಾಜಿಕ ಭದ್ರತಾ ಯೋಜನೆ, ಸಕಾಲ ಅರ್ಜಿ ಕೇಂದ್ರ, ಆಹಾರ ವಿಭಾಗವನ್ನು ಜಿಲ್ಲಾಧಿಕಾರಿ ಪರಿಶೀಲಿಸಿದರು.

ಅಲ್ಲಿನ ಆಡಳಿತ ವೈಖರಿ ಮತ್ತು ಕಚೇರಿಗೆ ಬರುವ ಜನಸಾಮಾನ್ಯರನ್ನು ಅಲೆದಾಡಿಸುವುದನ್ನು ಕಂಡು ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.

ADVERTISEMENT

11 ಗಂಟೆಯಾದರೂ ತಹಶೀಲ್ದಾರ್ ರಾಮ್ ಲಕ್ಷ್ಮಣ್ ಸೇರಿ ಹಲವು ಅಧಿಕಾರಿಗಳು ಕಚೇರಿಗೆ ಬಂದಿರಲಿಲ್ಲ. ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಸೂಕ್ತ ಕ್ರಮ ಜರುಗಿಸುವಂತೆ ವಿಜಯಶಂಕರ್‌ ಸೂಚನೆ ನೀಡಿದರು. ಅವಧಿ ಮೀರಿದ ಔಷಧಿಗಳು ವಿತರಿಸುತ್ತಿದ್ದ ಫಾರ್ಮಸಿಸ್ಟ್ ಗಳಾದ ಪ್ರಿಯದರ್ಶಿನಿ ಮತ್ತು ವನಜಾಕ್ಷಿ ಅವರನ್ನು ಅಮಾನತುಗೊಳಿಸುವಂತೆ ಸೂಚಿಸಿದರು. ವೈದ್ಯಕೀಯ ಸೂಪರಿಂಟೆಂಡೆಂಟ್‌ ಗೈರು ಹಾಜರಿಗೆ ಷೋಕಾಸ್ ನೋಟಿಸ್ ಜಾರಿ ಮಾಡಿದರು.

‘ಜನರಿಗೆ ಸಮರ್ಪಕವಾಗಿ ಸೇವೆಗಳು ಸಿಗುತ್ತಿಲ್ಲ ಎಂದು ಪದೇ ಪದೇ ದೂರುಗಳು ಬಂದ ಹಿನ್ನೆಲೆಯಲ್ಲಿ ಅನಿರೀಕ್ಷಿತವಾಗಿ ಭೇಟಿ ನೀಡಿದ್ದೇನೆ’ ಎಂದು ಜಿಲ್ಲಾಧಿಕಾರಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.