ಕೆ.ಆರ್.ಪುರ: ‘ಬೆಂಗಳೂರು ನಗರ ಜಿಲ್ಲೆಯನ್ನು 2025ರ ವೇಳೆಗೆ ಕ್ಷಯ ರೋಗ ಮುಕ್ತವಾಗಿಸುವುದು ನಮ್ಮೆಲ್ಲರ ಮುಖ್ಯ ಗುರಿಯಾಗಬೇಕು’ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಹೇಳಿದರು.
ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಬೆಂಗಳೂರು ಪೂರ್ವ ತಾಲ್ಲೂಕಿನ ಕಣ್ಣೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
‘ಕ್ಷಯರೋಗ ಪತ್ತೆ ಪ್ರಮಾಣವು ನಮ್ಮ ನಗರ ಜಿಲ್ಲೆಯಲ್ಲಿ ಒಂದು ಲಕ್ಷ ಜನ ಸಂಖ್ಯೆಗೆ 136 ಸರಾಸರಿ ಇದೆ. ಕ್ಷಯ ರೋಗ ಗುಣಪಡಿಸುವಲ್ಲಿ ಶೇ.100 ರಷ್ಟು ಸಾಧನೆಯಾಗಬೇಕು’ ಎಂದರು.
‘ಒಂದು ಲಕ್ಷ ಜನಸಂಖ್ಯೆಗೆ 10 ಪ್ರಕರಣಗಳಿಗಿಂತ ಕಡಿಮೆ ಪ್ರಮಾಣದಲ್ಲಿ ರೋಗ ಪತ್ತೆಯಾಗುವಂತೆ ಕ್ರಮವಹಿಸಲು ಎಲ್ಲರೂ ಶ್ರಮಿಸಬೇಕಿದೆ. ಈ ರೋಗದಿಂದ ಯಾವುದೇ ಸಾವು ಸಂಭವಿಸದಂತೆ ಎಚ್ಚರ ವಹಿಸುವ ಅಗತ್ಯವಿದೆ’ ಎಂದು ಅವರು ಹೇಳಿದರು.
ಜಿಲ್ಲಾ ಕ್ಷಯ ರೋಗ ನಿರ್ಮೂಲನಾಧಿಕಾರಿ ಡಾ. ಮಹೇಶ್ ಕುಮಾರ್, ‘ಇದು ಸೂಕ್ತ ಚಿಕಿತ್ಸೆ ಮೂಲಕ ಗುಣಪಡಿಸಬಹುದಾದ ರೋಗವಾಗಿದ್ದು, ಹರಡುವುದನ್ನು ತಡೆಗಟ್ಟಲು, ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸುವ ಅಗತ್ಯವಿದೆ’ ಎಂದರು.
ಪೂರ್ವ ತಾಲ್ಲೂಕಿನ ಆರೋಗ್ಯಾಧಿಕಾರಿಡಾ. ಚಂದ್ರಶೇಖರಯ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಶ್ರೀನಿವಾಸ ಜಿ.ಎ., ತಹಶಿಲ್ದಾರ್ ಅಜಿತ್ ಕುಮಾರ್, ಕಣ್ಣೂರಿನ ಪ್ರಾಥಮಿಕ ಆರೋಗ್ಯಾಧಿಕಾರಿ ಉಮಾ ರಾಕೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಅಕ್ಕಯ್ಯಮ್ಮ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.