
ಕೆ.ಆರ್.ಪುರ: ‘ಬಿಕ್ಲು ಶಿವು ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಶಾಸಕ ಬೈರತಿ ಬಸವರಾಜ ವಿರುದ್ದದ ಪ್ರಕರಣ ರಾಜಕೀಯ ಪ್ರೇರಿತ ಎಂದು ಬಿಜೆಪಿಯು ರಾಜ್ಯ ಸರ್ಕಾರದ ಮೇಲೆ ಬೊಟ್ಟು ಮಾಡುತ್ತಿರುವುದು ಹಾಸ್ಯಾಸ್ಪದ’ ಎಂದು ಬೆಂಗಳೂರು ಪೂರ್ವ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಮೋಹನ್ ಹೇಳಿದರು.
‘ವಿರೋಧ ಪಕ್ಷದ ನಾಯಕ ಆರ್.ಅಶೋಕ ಅವರು ಶಾಸಕರ ಮನೆಗೆ ಭೇಟಿ ನೀಡಿ ಬೆಂಬಲ ಸೂಚಿಸಿರುವುದು ಅವರ ರಾಜಕೀಯ ದ್ವಂದ್ವಕ್ಕೆ ಸಾಕ್ಷಿ. ಬೈರತಿ ಬಸವರಾಜ ಅವರು ಕಾಂಗ್ರೆಸ್ನಲ್ಲಿದ್ದಾಗ ಕ್ಷೇತ್ರದಲ್ಲಿ ಕೊಲೆ ಪ್ರಕರಣಗಳು ಹಾಗೂ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಆರೋಪಿಸಿ ಆರ್.ಅಶೋಕ ಹಾಗೂ ಬಿಜೆಪಿ ನಾಯಕರು ರಾಜ್ಯಪಾಲರಿಗೆ ದೂರು ನೀಡಿದ್ದರು’ ಎಂದು ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
‘ಶುದ್ಧಹಸ್ತರೆಂದು ಈಗ ಬೈರತಿ ಪರವಾಗಿ ಮಾತನಾಡುತ್ತಿರುವ ಇವರಿಗೆ ನೈತಿಕತೆಯಿಲ್ಲ. ತಪ್ಪು ಯಾರೇ ಮಾಡಿದ್ದರೂ ಅಂತಹವರಿಗೆ ಕಠಿಣ ಶಿಕ್ಷೆ ಆಗಲೇಬೇಕು’ ಎಂದು ಒತ್ತಾಯಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೊದಂಡರಾಮ, ಕಾಂಗ್ರೆಸ್ ಮುಖಂಡರಾದ ಅಗರ ಆರ್.ಪ್ರಕಾಶ್, ಮೇಡಹಳ್ಳಿ ರಾಕೇಶ್, ಆಂಜಿನಪ್ಪ, ಆನಂದ್ ಪ್ರಸಾದ್ ಶ್ರೀನಿವಾಸ್ ಸುಬ್ಬು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.