
ಕೆ.ಆರ್.ಪುರ: ಬಿದರಹಳ್ಳಿ-ಕಿತ್ತಗನೂರು ಮುಖ್ಯರಸ್ತೆಯನ್ನು ಬೆಂಗಳೂರು ನಗರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯತೀಶ್ ಹಾಗೂ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಸಂತ್ ಕುಮಾರ್ ಅವರು ಬುಧವಾರ ಪರಿವೀಕ್ಷಣೆ ನಡೆಸಿದರು.
‘ಬಿದರಹಳ್ಳಿ- ಕಿತ್ತಗನೂರು ರಸ್ತೆ ಕೆಸರುಮಯ' ಎಂಬ ವರದಿ ‘ಪ್ರಜಾವಾಣಿ’ಯ ಮಂಗಳವಾರದ ಸಂಚಿಕೆಯಲ್ಲಿ ಪ್ರಕಟವಾಗಿತ್ತು. ವರದಿಗೆ ಸ್ಪಂದಿಸಿದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ರಸ್ತೆ ಅಭಿವೃದ್ಧಿಪಡಿಸಲು ಸ್ಥಳೀಯ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚಿಸಿದರು.
ಮುಖ್ಯರಸ್ತೆಯ ಅಕ್ಕಪಕ್ಕದಲ್ಲಿನ ಜಮೀನು ಮಾಲೀಕರ ಖಾಸಗಿ ಸ್ವತ್ತುಗಳಿಗೆ ಸಂಬಂಧಿಸಿದ ವ್ಯಾಜ್ಯ ಇರುವುದರಿಂದ ರಸ್ತೆ ಅಭಿವೃದ್ಧಿಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ಅಧಿಕಾರಿಗಳು ತಿಳಿಸಿದರು.
ವಸಂತ್ ಕುಮಾರ್ ಮಾತನಾಡಿ, ‘ಬಿದರಹಳ್ಳಿ- ಕಿತ್ತಗನೂರು ಮುಖ್ಯರಸ್ತೆ ಅಭಿವೃದ್ಧಿಪಡಿಸಲು ಎಂಟು ಗುಂಟೆ ಜಮೀನಿಗೆ ಟಿಡಿಆರ್ ನೀಡಬೇಕಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಚರ್ಚೆ ಮಾಡಿ ಜಮೀನು ವಶಪಡಿಸಿಕೊಂಡು ರಸ್ತೆ ಅಭಿವೃದ್ಧಿಪಡಿಸಲಾಗುವುದು’ ಎಂದರು.
ಕಿತ್ತಗನೂರು ಗ್ರಾಮ ಪಂಚಾಯಿತಿ ಸದಸ್ಯ ಕೆ.ವಿ.ನಾಗರಾಜ್, ಬಿದರಹಳ್ಳಿ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಂ.ಎನ್.ಲೋಹಿತ್, ಕಾರ್ಯದರ್ಶಿ ಎನ್.ಮುನಿರಾಜು, ಸ್ಥಳೀಯ ಮುಖಂಡ ವಿ.ಪಿ.ಕೃಷ್ಣ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.