ADVERTISEMENT

ಠಾಣಾಧಿಕಾರಿಗೆ ಜೀವ ಬೆದರಿಕೆ ಆರೋಪ: ಕೆಆರ್‌ಎಸ್‌ ಕಾರ್ಯಕರ್ತರ ವಿರುದ್ಧ ಪ್ರಕರಣ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 15:32 IST
Last Updated 5 ಅಕ್ಟೋಬರ್ 2025, 15:32 IST
   

ಬೆಂಗಳೂರು: ಉಪ್ಪಾರಪೇಟೆ ಪೊಲೀಸ್ ಠಾಣೆಯ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಷ್ಟ್ರ ಸಮಿತಿ (ಕೆ.ಆರ್.ಎಸ್‌) ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಾಗಿದೆ.

ತನಿಖಾಧಿಕಾರಿಗಳಿಗೆ ಬೆದರಿಕೆ ಹಾಕಿರುವುದು ಹಾಗೂ ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿದ ಆರೋಪದ ಮೇಲೆ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

‘ಪೊಲೀಸರು ಅನುಮತಿ ನಿರಾಕರಿಸಿದ ಬಳಿಕವೂ ಸೆಪ್ಟೆಂಬರ್ 29ರಂದು ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ನಡೆಸುವುದಾಗಿ ಪಕ್ಷದ ಫೇಸ್‌ಬುಕ್ ಖಾತೆ ಹಾಗೂ ಜಾಲತಾಣಗಳ ಮೂಲಕ ಮುಖಂಡರು ಹೇಳಿಕೆ ನೀಡಿದರು. ಹೈಕೋರ್ಟ್‌ ಆದೇಶದ ಪ್ರಕಾರ ನಗರದ ಫ್ರೀಡಂ ಪಾರ್ಕ್ ಹೊರತುಪಡಿಸಿ ಬೇರೆ ಕಡೆ ಪ್ರತಿಭಟನೆಗೆ ಅವಕಾಶ ಇಲ್ಲ. ಆದರೂ ಸುಮಾರು 60–70 ಕಾರ್ಯಕರ್ತರು ಗಾಂಧಿನಗರದ 6ನೇ ಮತ್ತು 2ನೇ ಮುಖ್ಯ ರಸ್ತೆಯಲ್ಲಿ ಘೋಷಣೆಗಳನ್ನು ಕೂಗಿ, ಮೆರವಣಿಗೆ ನಡೆಸಿದರು. ಅಲ್ಲದೇ ಸುಗಮ ಸಂಚಾರಕ್ಕೆ ಅಡ್ಡಿಪಡಿಸಿದರು. ಹಾಗಾಗಿ ಉಪ್ಪಾರ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಬಂಧಿಸಿ, ಠಾಣಾ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು’ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

‘ಬಿಡುಗಡೆಯಾದ ಬಳಿಕ ಪ್ರಕರಣದ ತನಿಖೆಯಲ್ಲಿ ಭಾಗವಹಿಸಿದ್ದ ಅಧಿಕಾರಿಗಳಿಗೆ ಜೀವ ಬೆದರಿಕೆ ಹಾಕಿ, ಜಾಲತಾಣದಲ್ಲಿ ಸುಳ್ಳು ಸುದ್ದಿ ಹಬ್ಬಿಸುವುದು ಮುಂದುವರಿಸಿದ್ದಾರೆ. ಹಾಗಾಗಿ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ’ ಎಂದು ಹೇಳಿದ್ದಾರೆ.

‘ಮೆರವಣಿಗೆ ನಡೆಸಿರುವುದಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿಯೇ ಎಲ್ಲರಿಗೂ ಜಾಮೀನು ನೀಡಿದರು. ಬಳಿಕ ಮೊಬೈಲ್ ಜಪ್ತಿ ಮಾಡಿದರು. ಹಾಗಾಗಿ ಪೊಲೀಸರ ವರ್ತನೆ ಬಗ್ಗೆ ಜಾಲತಾಣದಲ್ಲಿ ಹೇಳಿಕೆ ನೀಡಲಾಗಿದೆಯೇ ಹೊರತು ಠಾಣಾಧಿಕಾರಿಗೆ ಬೆದರಿಕೆ ಹಾಕಿಲ್ಲ’ ಎಂದು ಸಮಿತಿ ಮುಖಂಡರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.