
ಬೆಂಗಳೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಇಪಿಎಸ್–95 ಬಿಎಂಟಿಸಿ, ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘದ ಸದಸ್ಯರು ಶುಕ್ರವಾರ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯನಿಧಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.
ಕನಿಷ್ಠ ₹7500 ಪಿಂಚಣಿ ಹಾಗೂ ಭತ್ಯೆ, ವೈದ್ಯಕೀಯ ಸೌಲಭ್ಯ ನೀಡಬೇಕು. ಇಪಿಎಸ್ ವ್ಯಾಪ್ತಿಗೆ ಬಾರದ ಹಲವು ನಿವೃತ್ತ ನೌಕರರಿಗೆ ₹ 5 ಸಾವಿರ ನೀಡಬೇಕು ಪ್ರತಿಭಟನಕಾರರು ಆಗ್ರಹಿಸಿದರು.
ಆರ್.ಸಿ.ಗುಪ್ತ ಹಾಗೂ ಸುನಿಲ್ ಕುಮಾರ್ ಪ್ರಕರಣಗಳಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪು ಅನ್ನು ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಿ ಸಿಬಿಟಿ ಅಧ್ಯಕ್ಷರೂ ಆದ ಕೇಂದ್ರ ಕಾರ್ಮಿಕ ಹಾಗೂ ಉದ್ಯೋಗ ಸಚಿವ ಮನ್ಸುಖ್ ಮಾಂಡವೀಯ ಹಾಗೂ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಮನವಿ ಪತ್ರ ಕಳುಹಿಸಿಕೊಡಲಾಯಿತು.
ನವದೆಹಲಿಯಲ್ಲಿ ಮಾರ್ಚ್ 2 ರಿಂದ ಪ್ರಾರಂಭವಾಗುವ ಸಿಬಿಟಿ ಸಭೆ ಹಾಗೂ ಮಾರ್ಚ್ 9 ರಿಂದ ಪ್ರಾರಂಭವಾಗುವ 2ನೇ ಹಂತದ ಸಂಸತ್ ಅಧಿವೇಶನದಲ್ಲಿ ಬೇಡಿಕೆಗಳನ್ನು ಈಡೇರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ನಂಜುಂಡೇಗೌಡ, ಕಾರ್ಯಾಧ್ಯಕ್ಷ ಶಂಕರ್ ಕುಮಾರ್, ಕೆಆಎಸ್ಆರ್ಟಿಸಿ ಚಿಕ್ಕಬಳ್ಳಾಪುರ ಟ್ರಸ್ಟ್ ಅಧ್ಯಕ್ಷ ಬ್ರಹ್ಮಚಾರಿ, ಸಾಮಾಜಿಕ ಕಾರ್ಯಕರ್ತ ಚಂದ್ರೇಗೌಡ, ಮನೋಹರ ಭಾಗವಹಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.