ADVERTISEMENT

ಫೆ.19ರಂದು ಬೆಂಗಳೂರು ಚಲೊ: ಸರ್ಕಾರದ ನಿಲುವಿಗಾಗಿ ಕಾಯಲಿರುವ ಸಂಘಟನೆ

ಬೆಂಗಳೂರು ಚಲೊ ಫೆಬ್ರುವರಿ 19 * ಸರ್ಕಾರದ ನಿಲುವಿಗಾಗಿ ಕಾಯಲಿರುವ ಸಂಘಟನೆ

​ಪ್ರಜಾವಾಣಿ ವಾರ್ತೆ
Published 18 ಫೆಬ್ರುವರಿ 2026, 16:08 IST
Last Updated 18 ಫೆಬ್ರುವರಿ 2026, 16:08 IST
ಕೆಎಸ್‌ಆರ್‌ಟಿಸಿ ಲೋಗೊ
ಕೆಎಸ್‌ಆರ್‌ಟಿಸಿ ಲೋಗೊ   

ಬೆಂಗಳೂರು: ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ನಿಗಮಗಳ ನೌಕರರ ಬೇಡಿಕೆ ಈಡೇರಿಸದೇ ಇರುವುದನ್ನು ಖಂಡಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ ನೇತೃತ್ವದಲ್ಲಿ ಫೆ.19ರಂದು ಬೆಂಗಳೂರು ಚಲೊ ನಡೆಯಲಿದೆ.

ಬಸ್‌ ಸಂಚಾರ ಎಂದಿನಂತೆ ಇರಲಿದೆ. ರಾಜ್ಯದ ವಿವಿಧ ಭಾಗಗಳಿಂದ ಮುಖಂಡರು ಭಾಗವಹಿಸಲಿದ್ದಾರೆ. ಗುರುವಾರ ಸಂಜೆಯ ಒಳಗೆ ಸರ್ಕಾರ ಯಾವ ರೀತಿ ಸ್ಪಂದಿಸಲಿದೆ ಎಂಬುದನ್ನು ನೋಡಿಕೊಂಡು ಮುಂದಿನ ನಡೆಯ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಂಘಟನೆಯ ಮುಖಂಡರು ತಿಳಿಸಿದ್ದಾರೆ.

38 ತಿಂಗಳ ಹಿಂಬಾಕಿ ನೀಡಿಲ್ಲ. 2024ರ ಜನವರಿಯಲ್ಲಿ ವೇತನ ಪರಿಷ್ಕರಣೆ ನಡೆಸಬೇಕಿತ್ತು. ಹಲವು ಬಾರಿ ಸರ್ಕಾರದೊಂದಿಗೆ ಮಾತುಕತೆ ನಡೆಸಿದರೂ ಯಾವುದೇ ಪ್ರಯೋಜನವಾಗದೇ ಇರುವುದರಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಎಂದು ಕ್ರಿಯಾ ಸಮಿತಿಯ ಸಂಚಾಲಕ ಬಿ. ಜಯದೇವ ಅರಸು, ಕಾರ್ಯದರ್ಶಿ ವಿಜಯಭಾಸ್ಕರ್ ಮಾಹಿತಿ ನೀಡಿದ್ದಾರೆ.

ADVERTISEMENT

'ಅಂದು ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿ ಶಾಂತಿಯುತವಾಗಿ ಪ್ರತಿಭಟನೆ ನಡೆಸಲಾಗುವುದು’ ಎಂದು ತಿಳಿಸಿದ್ದಾರೆ.

‘ಬೇಡಿಕೆಗಳ ಈಡೇರಿಕೆಗಾಗಿ ಕಳೆದ ಆಗಸ್ಟ್‌ನಲ್ಲಿ ಮುಷ್ಕರಕ್ಕೆ ಕರೆ ನೀಡಲಾಗಿತ್ತು. ಹೈಕೋರ್ಟ್‌ನ ಸೂಚನೆಯ ಮೇರೆಗೆ ಮುಷ್ಕರ ಕೈಬಿಡಲಾಗಿತ್ತು. ಆ ನಂತರ ಮಾತುಕತೆ ನಡೆಸಿದರೂ 2024 ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆ ಮಾಡಲು ಸರ್ಕಾರ ಒಪ್ಪಿಲ್ಲ. 39 ತಿಂಗಳ ಹಿಂಬಾಕಿ ನೀಡಬೇಕಿದ್ದು, 14 ತಿಂಗಳ ಹಿಂಬಾಕಿ ನೀಡಲಷ್ಟೇ ಒಪ್ಪಿದೆ. ಹಿಂಬಾಕಿ ಪೂರ್ಣ ನೀಡಬೇಕು. ಪ್ರತಿ ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆ ಮಾಡಬೇಕು ಎಂಬ ಒಪ್ಪಂದ ಮುರಿಯಬಾರದು. ಶೇ 25ರಷ್ಟು ವೇತನ ಹೆಚ್ಚಳ ಮಾಡಿ 2024ರಿಂದಲೇ ಜಾರಿ ಮಾಡಬೇಕು ಎಂಬುದು ನಮ್ಮ ಬೇಡಿಕೆಯಾಗಿದೆ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.