ಬೆಂಗಳೂರು: ಆರ್.ಆರ್. ನಗರ ಕ್ಷೇತ್ರದಿಂದ ಜೆಡಿಎಸ್ ಮುಖಂಡ ಹನುಮಂತರಾಯಪ್ಪ ಅವರ ಮಗಳು, ದಿವಂಗತ ಐಎಎಸ್ ಅಧಿಕಾರಿ ಡಿ.ಕೆ. ರವಿ ಪತ್ನಿ ಕುಸುಮಾ ರವಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ನಲ್ಲಿ ಗಂಭೀರ ಚರ್ಚೆ ನಡೆದಿದೆ.
ಹನುಮಂತರಾಯಪ್ಪ ಅವರ ನಿವಾಸಕ್ಕೆ ಶನಿವಾರ ರಾತ್ರಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸಂಸದ ಡಿ.ಕೆ. ಸುರೇಶ್, ಶಾಸಕ ರಮೇಶ್ ಕುಮಾರ್ ಭೇಟಿ ನೀಡಿ ಒಂದು ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಕುಸುಮಾ ಅವರ ಜೊತೆಗೂ ಚರ್ಚಿಸಿದರು. ಕುಸುಮಾ ರವಿ ಅವರು ಭಾನುವಾರ ಕಾಂಗ್ರೆಸ್ ಸೇರಲಿದ್ದಾರೆ.
ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ‘ಹನುಮಂತರಾಯಪ್ಪ ಅವರ ಜೊತೆ ಚರ್ಚೆ ನಡೆಸಿದ್ದೇವೆ. ಮೊದಲಿಂದಲೂ ನಾವು ಈ ಕುಟುಂಬದ ಹಿತೈಷಿಗಳು. ಕುಸುಮಾ ಅವರು ಭಾನುವಾರ ಪಕ್ಷದ ಸದಸ್ಯತ್ವ ಪಡೆಯಲಿದ್ದಾರೆ’ ಎಂದರು.
‘ಆರ್.ಆರ್. ನಗರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ವಿಷಯದಲ್ಲಿ ಶಾಸಕ ರಾಮಲಿಂಗಾ ರೆಡ್ಡಿ ನೇತೃತ್ವದ ಸಮಿತಿ ನಿರ್ಧರಿಸಲಿದೆ. ಸಮಿತಿ ಶಿಫಾರಸು ಮಾಡುವ ಹೆಸರುಗಳನ್ನು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಜತೆ ಚರ್ಚೆ ಮಾಡುತ್ತೇವೆ. ಬಳಿಕ ಅಭ್ಯರ್ಥಿಯನ್ನು ಅಂತಿಮಗೊಳಿಸುತ್ತೇವೆ’ ಎಂದರು.
‘ಆರ್.ಆರ್. ನಗರ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಚ್ಚರಿ ಅಭ್ಯರ್ಥಿಯನ್ನು ಕಣಕ್ಕಿಳಿಸಲಿದೆ ಎಂದಿದ್ದೆ. ಕುಸುಮಾ ಅವರು ಅಚ್ಚರಿ ಅಭ್ಯರ್ಥಿ ಹೌದೊ, ಅಲ್ಲವೊ ಎನ್ನುವುದನ್ನು ಕಾದು ನೋಡಿ’ ಎಂದರು.
ಸಂಸದ ಡಿ.ಕೆ. ಸುರೇಶ್ ಮಾತನಾಡಿ, ‘ಆರ್.ಆರ್, ನಗರದಿಂದ ಸೂಕ್ತ ಅಭ್ಯರ್ಥಿಯನ್ನು ಪಕ್ಷ ಕಣಕ್ಕಿಳಿಸಲಿದೆ. ಯಾರೆಲ್ಲಾ ಪಕ್ಷ ಬಿಟ್ಟಿದ್ದಾರೊ ಅವರನ್ನು ಸೇರಿಸಿಕೊಳ್ಳುತ್ತಿದ್ದೇವೆ. ಆರ್.ಆರ್. ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದೇ ಗೆಲ್ಲುತ್ತಾರೆ’ ಎಂದರು.
‘ಈ ಕ್ಷೇತ್ರದಲ್ಲಿ ಏಳು ಜನ ಆಕಾಂಕ್ಷಿಗಳಿದ್ದಾರೆ. ಹನುಮಂತರಾಯಪ್ಪ ಈ ಭಾಗದಲ್ಲಿ ಸಾಕಷ್ಟು ಕೆಲಸ ಮಾಡಿದ್ದಾರೆ. ಅಭ್ಯರ್ಥಿ ಯಾರು ಎಂಬುದನ್ನು ಪಕ್ಷದ ಹಿರಿಯರು ತೀರ್ಮಾನಿಸುತ್ತಾರೆ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.