ಬೆಂಗಳೂರು: ಕುಪ್ಪಳಿಯ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನ ನೀಡುವ ‘ಕುವೆಂಪು ರಾಷ್ಟ್ರೀಯ ಪುರಸ್ಕಾರ’ಕ್ಕೆ ಬಂಗಾಳಿ ಸಾಹಿತಿ ಶೀರ್ಷೇಂದು ಮುಖ್ಯೋಪಾಧ್ಯಾಯ ಆಯ್ಕೆಯಾಗಿದ್ದಾರೆ.
ಈ ಪುರಸ್ಕಾರ ₹5 ಲಕ್ಷ ನಗದು ಹಾಗೂ ಬೆಳ್ಳಿ ಪದಕವನ್ನು ಒಳಗೊಂಡಿದೆ. ಪ್ರತಿಷ್ಠಾನದ ಅಧ್ಯಕ್ಷ ಬಿ.ಎಲ್. ಶಂಕರ್ ನೇತೃತ್ವದ ಸಮಿತಿ ಈ ಆಯ್ಕೆ ಮಾಡಿದೆ. ನಿರ್ಮಲ್ ಕಾಂತಿ ಭಟ್ಟಾಚಾರ್ಯ, ಗೀತಾ ವಿಜಯಕುಮಾರ್ ಹಾಗೂ ಅಗ್ರಹಾರ ಕೃಷ್ಣಮೂರ್ತಿ ಸಮಿತಿಯಲ್ಲಿದ್ದರು.
ಶೀರ್ಷೇಂದು ಅವರು ಹೊಸತನದ ಬರವಣಿಗೆ ಶೈಲಿಯಿಂದ ಬಂಗಾಳಿ ಸಾಹಿತ್ಯವನ್ನು ಹಾಗೂ ಭಾರತೀಯ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಕಥೆ, ಕಾದಂಬರಿ, ಪ್ರವಾಸ ಕಥನ, ಮಕ್ಕಳ ಕಥೆಗಳು ಸೇರಿ 90 ಪುಸ್ತಕಗಳನ್ನು ಬರೆದಿದ್ದಾರೆ ಎಂದು ಪ್ರತಿಷ್ಠಾನದ ಸಮಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ತಿಳಿಸಿದ್ದಾರೆ.
ಕುವೆಂಪು ಅವರ ಜನ್ಮದಿನವಾದ ಡಿ.29ರಂದು ಪುರಸ್ಕಾರವನ್ನು ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ಹೇಳಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.