ಬೆಂಗಳೂರು: ‘ಕಾರ್ಮಿಕ ಕಾಯ್ದೆಗಳನ್ನು ತಿದ್ದುಪಡಿ ಮಾಡುವ ಮೂಲಕ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿವೆ’ ಎಂದು ಆರೋಪಿಸಿ ಕಾರ್ಮಿಕರು ನಗರದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ಸ್ವಾತಂತ್ರ್ಯ ಉದ್ಯಾನದಲ್ಲಿ ಅಖಿಲ ಭಾರತ ಕಾರ್ಮಿಕ ಸಂಘಟನೆಗಳ ಕೇಂದ್ರೀಯ ಸಮಿತಿ (ಎಐಸಿಸಿಟಿಯು) ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.
ಸಮಿತಿಯ ರಾಜ್ಯ ಘಟಕದ ಅಧ್ಯಕ್ಷ ಪುಟ್ಟೇಗೌಡ, ‘ಲಾಕ್ಡೌನ್ನಿಂದಾಗಿ ಕೆಲಸ ಹಾಗೂ ಆಹಾರವಿಲ್ಲದೇ ಕಾರ್ಮಿಕರು ಪರದಾಡುತ್ತಿದ್ದಾರೆ. ಕೆಲವೆಡೆ ಕಾರ್ಮಿಕರನ್ನು ಕೆಲಸದಿಂದ ಕಿತ್ತು ಹಾಕಲಾಗುತ್ತಿದೆ. ಇಂಥ ಸಂದರ್ಭ ದಲ್ಲೇ ಕಾಯ್ದೆಗಳಿಗೆ ತಿದ್ದುಪಡಿ ತಂದು ಕಾರ್ಮಿಕರಿಗೆ ಸರ್ಕಾರಗಳು ಅನ್ಯಾಯ ಮಾಡುತ್ತಿವೆ’ ಎಂದು ದೂರಿದರು.
ವಿಕ್ಟೋರಿಯಾ ಆಸ್ಪತ್ರೆಯ ಕಾರ್ಮಿಕರ ಸಂಘದ ಅಧ್ಯಕ್ಷೆ ಮೀನಾ, ‘ಕೊರೊನಾ ಸೋಂಕಿತರ ಚಿಕಿತ್ಸಾ ತ್ಯಾಜ್ಯವನ್ನು ಕಾರ್ಮಿಕರು ವಿಲೇವಾರಿ ಮಾಡುತ್ತಿದ್ದಾರೆ. ಕೊರೊನಾ ಯೋಧರಾಗಿ ಕೆಲಸ ಮಾಡುತ್ತಿದ್ದಾರೆ. ಆದರೆ, ನಮಗೆ ಸೂಕ್ತ ವೇತನ ಹಾಗೂ ಸೇವಾ ಭದ್ರತೆ ಇಲ್ಲ’ ಎಂದರು.
ರೆಡಿ–ಮಿಕ್ಸ್ ಕಾಂಕ್ರಿಟ್ ಕಾರ್ಮಿಕರ ಸಂಘದ ಕಾರ್ಯದರ್ಶಿ ಸೋಮು, ‘ಕಾರ್ಮಿಕರಿಗೆ ಅನ್ಯಾಯವಾಗುತ್ತಿದೆ. ಇದರ ವಿರುದ್ಧ ಎಲ್ಲರೂ ಒಗ್ಗಟ್ಟಾಗಿ ಹೋರಾಡಬೇಕಿದೆ’ ಎಂದರು.
ಸಿಪಿಐ (ಎಂಎಲ್) ಪಕ್ಷದ ಕರ್ನಾಟಕದ ಘಟಕದ ಕಾರ್ಯದರ್ಶಿ ಕ್ಲಿಫ್ಟನ್ ಡಿ. ರೊಜಾರಿಯೊ ಮಾತನಾಡಿ, ‘ಸರ್ಕಾರ ಗಳು ಕಾಯ್ದೆಗಳನ್ನು ದುರ್ಬಲಗೊಳಿಸುತ್ತಿಲ್ಲ. ಇಡೀ ಸಂವಿಧಾನವನ್ನೇ ದುರ್ಬಲಗೊಳಿಸುತ್ತಿವೆ’ ಎಂದು ದೂರಿದರು.
ಬಿಬಿಎಂಪಿಯ ಪೌರ ಕಾರ್ಮಿಕರ ಸಂಘ, ನಿಮ್ಹಾನ್ಸ್ ಪ್ರಗತಿಪರ ಕಾರ್ಮಿಕರ ಸಂಘ, ವಿಕ್ಟೋರಿಯಾ ಆಸ್ಪತ್ರೆ ಕಾರ್ಮಿಕರ ಸಂಘ, ಗ್ರಂಥಾಲಯ ಕಾರ್ಮಿಕರ ಸಂಘ, ಬೆಂಗಳೂರು ಜಿಲ್ಲಾ ಬೀದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ, ಎನ್ಎಎಲ್ ಕಾರ್ಮಿಕರ ಸಂಘ, ಐಟಿಐ ಕಾರ್ಮಿಕರ ಸಂಘ, ಬಿಎಂಟಿಸಿ ಕಾರ್ಮಿಕರ ಸಂಘಟನೆ ಸದಸ್ಯರು ಸೇರಿದಂತೆ ನೂರಾರು ಕಾರ್ಮಿಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.