ADVERTISEMENT

ಅನ್ಯ ಉದ್ದೇಶಕ್ಕೆ ನಿಧಿ ಬಳಕೆ: 9ಕ್ಕೆ ಕಾರ್ಮಿಕರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 17:25 IST
Last Updated 4 ಜುಲೈ 2025, 17:25 IST
<div class="paragraphs"><p>ಪ್ರಾತಿನಿಧಿಕ ಚಿತ್ರ&nbsp;</p></div>

ಪ್ರಾತಿನಿಧಿಕ ಚಿತ್ರ 

   

– ಪ್ರಜಾವಾಣಿ ಚಿತ್ರ

ಬೆಂಗಳೂರು: ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯನ್ನು ವಸತಿ ಶಾಲೆ ನಿರ್ಮಾಣದಂತಹ ಅನ್ಯ ಉದ್ದೇಶಕ್ಕೆ ಬಳಸದಂತೆ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಇದೇ 9ರಂದು ಕರ್ನಾಟಕ ರಾಜ್ಯ ಕಟ್ಟಡ ನಿರ್ಮಾಣ ಕಾರ್ಮಿಕರ ಸಂಘಟನೆಗಳ ಸಮನ್ವಯ ಸಮಿತಿಯು ರಾಜ್ಯದಾದ್ಯಂತ ಮುಷ್ಕರ ಹಮ್ಮಿಕೊಂಡಿದೆ. 

ADVERTISEMENT

ಶುಕ್ರವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಪ್ರಧಾನ ಕಾರ್ಯದರ್ಶಿ ಕೆ. ಮಹಾಂತೇಶ್, ‘ಮಂಡಳಿಯ ನಿಧಿ ಬಳಸಿ, ₹1,125 ಕೋಟಿ ವೆಚ್ಚದಲ್ಲಿ ಕಾರ್ಮಿಕರ ಮಕ್ಕಳಿಗೆ ವಸತಿ ಶಾಲೆಗಳು ಮತ್ತು ₹968 ಕೋಟಿ ವೆಚ್ಚದಲ್ಲಿ ಎರಡು ಕೌಶಲ ಕೇಂದ್ರಗಳ ಸ್ಥಾಪನೆಗೆ ಸಚಿವ ಸಂಪುಟ ಸಭೆ ನಿರ್ಧರಿಸಿದೆ. ಈ ಕಾರ್ಯಕ್ಕೆ ಕಾರ್ಮಿಕರ ಸಾಮಾಜಿಕ ಭದ್ರತೆಗೆ ಇರಿಸಲಾದ ಮಂಡಳಿಯ ನಿಧಿ ಬಳಸುವುದು ಸರಿಯಲ್ಲ. ಕೌಶಲ ತರಬೇತಿ ಕೇಂದ್ರದ ಸ್ಥಾಪನೆಯನ್ನು ಕೈಬಿಡಬೇಕು’ ಎಂದು ಆಗ್ರಹಿಸಿದರು.

‘ಹೈಕೋರ್ಟ್ ತೀರ್ಪಿನಂತೆ ಶೈಕ್ಷಣಿಕ ಧನ ಸಹಾಯ, ಹೆರಿಗೆ ಭತ್ಯೆ, ಶವ ಸಂಸ್ಕಾರ ಸಹಾಯ ಧನ ನೀಡಬೇಕು. ಬಾಕಿ ಇರುವ ಪಿಂಚಣಿ ಅರ್ಜಿಗಳಿಗೆ ಹಣ ಪಾವತಿಸಬೇಕು. ಮನೆ ನಿರ್ಮಾಣಕ್ಕೆ ₹5 ಲಕ್ಷ ಸಹಾಯ ಧನ ನೀಡಬೇಕು. ಮಂಡಳಿಯನ್ನು ಭ್ರಷ್ಟಚಾರದಿಂದ ಮುಕ್ತಗೊಳಿಸಬೇಕು. ವೈದ್ಯಕೀಯ ನೆರವು ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಟ್ಟಡ ಕಾರ್ಮಿಕರು ಕೆಲಸ ಸ್ಥಗಿತಗೊಳಿಸಿ, ಮುಷ್ಕರ ನಡೆಸಲಿದ್ದಾರೆ’ ಎಂದು ತಿಳಿಸಿದರು.

ಕಾರ್ಮಿಕ ಮುಖಂಡರಾದ ಲಿಂಗರಾಜ್, ಶಾಮಣ್ಣ ರೆಡ್ಡಿ, ಶ್ರೀನಿವಾಸ್, ಷಣ್ಮುಗಂ ಪಿ.ಎಸ್., ದೇವದಾಸ್ ಉಪಸ್ಥಿತರಿದ್ದರು.   

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.