
ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ಲಾಲ್ಬಾಗ್ ಗಾಜಿನ ಮನೆಯಲ್ಲಿ ಆಯೋಜಿಸಿರುವ ‘ತೇಜಸ್ವಿ ವಿಸ್ಮಯ’ ವಿಷಯ ಆಧಾರಿತ ಫಲಪುಷ್ಪಪ್ರದರ್ಶನ ವೀಕ್ಷಿಸಲು ಭಾನುವಾರ 1.14 ಲಕ್ಷ ಜನ ಭೇಟಿ ನೀಡಿದ್ದು, ₹46 ಲಕ್ಷ ಪ್ರವೇಶ ಶುಲ್ಕ ಸಂಗ್ರಹವಾಗಿದೆ.
ಲಾಲ್ಬಾಗ್ನ ನಾಲ್ಕೂ ಪ್ರವೇಶ ದ್ವಾರಗಳಲ್ಲಿ ಜನಸಂದಣಿ ಹೆಚ್ಚಿತ್ತು. ಲಾಲ್ಬಾಗ್ನ ಮುಖ್ಯ ಗೇಟಿನ ರಸ್ತೆಯಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ಏಕಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರೂ, ಬೀದಿ ವ್ಯಾಪಾರಿಗಳ ಹಾವಳಿಯಿಂದಾಗಿ ಸಂಚಾರ ದಟ್ಟಣೆ ಉಂಟಾಗಿತ್ತು.
ಲಾಲ್ಬಾಗ್ ಮೆಟ್ರೊ ನಿಲ್ದಾಣದಲ್ಲಿ ಟಿಕೆಟ್ ಖರೀದಿಗೆ ಪ್ರಯಾಣಿಕರು ಹರಸಾಹಸ ಪಡುತ್ತಿದ್ದರು. ಶಾಂತಿನಗರ ಬಸ್ ನಿಲ್ದಾಣದಿಂದ ಲಾಲ್ಬಾಗ್ನ ಗೇಟಿನವರೆಗೆ, ಉದ್ಯಾನದ ವೆಸ್ಟ್ಗೇಟ್ನ ಪಾದಚಾರಿ ಮಾರ್ಗಗಳಲ್ಲಿ ಕಿರು ಮಾರುಕಟ್ಟೆಗಳು ಸೃಷ್ಟಿಯಾಗಿದ್ದವು.
ಗಾಜಿನ ಮನೆಯಲ್ಲಿ ಪುಷ್ಪಗಳಲ್ಲಿ ಅರಳಿದ ತೇಜಸ್ವಿ ಅವರ ಜೀವನದ ಪ್ರಮುಖ ಘಟನೆಗಳನ್ನು ನೋಡಲು ಬಂದಿದ್ದ ಜನ ಸರತಿ ಸಾಲಿನಲ್ಲಿ ನಿಂತಿದ್ದರು. ಕಿಕ್ಕಿರಿದು ಸೇರಿದ್ದ ಜನರನ್ನು ನಿಯಂತ್ರಿಸಲು ಪೊಲೀಸರು ಮತ್ತು ತೋಟಗಾರಿಕೆ ಇಲಾಖೆ ಸಿಬ್ಬಂದಿ ಹರಸಾಹಸಪಟ್ಟರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.