
ಬೆಂಗಳೂರು: ಭೂ ತಕರಾರು ಪ್ರಕರಣಗಳ ವಿಲೇವಾರಿ ಸಂಬಂಧ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಕೈಗೊಂಡಿರುವ ಕ್ರಮಗಳು ದಿಟ್ಟತನದ್ದು. ಇದು ಜಾರಿಯಾದರೆ ವರ್ಷಾನುಗಟ್ಟಲೇ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು, ಬಡ ರೈತರು ಕೋರ್ಟ್ ಕಚೇರಿಗಳಿಗೆ ಅಲೆಯುವುದು ತಪ್ಪುತ್ತದೆ ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಹೇಳಿದೆ.
ಭೂ ಸಂಬಂಧಿತ ತಕರಾರು ಪ್ರಕರಣಗಳನ್ನು ಎಸಿ ನ್ಯಾಯಾಲಯದಿಂದ ತಹಶೀಲ್ದಾರ್ ಅವರಿಗೆ ಮರು ಪರಿಶೀಲನೆ ಮಾಡುವಂತೆ ಹಿಂತಿರುಗಿಸಲಾಗುತ್ತಿದೆ. ಇಂತಹ ಪ್ರಕರಣಗಳಲ್ಲಿ ಕಕ್ಷಿದಾರರಿಗೆ ಅನ್ಯಾಯ ಆಗುತ್ತಿರುವುದನ್ನು ಸಚಿವರು ಗಂಭೀರವಾಗಿ ಪರಿಗಣಿಸಿ 15 ದಿನ ಒಳಗೆ ಇತ್ಯರ್ಥ ಮಾಡಬೇಕೆಂದು ಆದೇಶ ಹೊರಡಿಸಿರುವುದು ಕ್ರಾಂತಿಕಾರಿ ತೀರ್ಮಾನ ಎಂದು ಪಕ್ಷದ ರಾಜ್ಯ ಅಧ್ಯಕ್ಷ ಮಾರಸಂದ್ರ ಮುನಿಯಪ್ಪ ತಿಳಿಸಿದ್ದಾರೆ.
ಕರ್ನಾಟಕ ಕಂದಾಯ ಕಾಯ್ದೆ 1964 ಕಲಂ 136(2) ಬಡವರ ವಿರೋಧಿ ಮತ್ತು ಭ್ರಷ್ಟಾಚಾರದ ಕೂಪವಾಗಿದೆ. ಕಂದಾಯ ಅಧಿಕಾರಿಗಳಿಗೆ ಲಂಚ ಕೊಡದ ಪ್ರಕರಣಗಳನ್ನು ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಪರಿಶೀಲನೆಗೆ ವರ್ಗಾವಣೆ ಮಾಡಲಾಗುತ್ತಿದ್ದು, ಇದರಿಂದ ಬಡವರು ಮಾನಸಿಕ ಹಿಂಸೆ ಅನುಭವಿಸುತ್ತಿದ್ದಾರೆ. ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ನ್ಯಾಯಾಲಯಗಳಲ್ಲಿ ಪ್ರಕರಣ ಶೀಘ್ರ ಇತ್ಯರ್ಥಕ್ಕೆ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.