ADVERTISEMENT

ಭೂ ವಿವಾದ ಪ್ರಕರಣ: ಇನ್‌ಸ್ಪೆಕ್ಟರ್ ಕುಮಾರ್‌, ಇಬ್ಬರು ಕಾನ್‌ಸ್ಟೆಬಲ್‌ಗಳು ವರ್ಗ

ಲಂಚದ ರೂಪದಲ್ಲಿ ಆಸ್ತಿ ವರ್ಗಾಯಿಸಿಕೊಳ್ಳಲು ಯತ್ನಿಸಿದ ಆರೋಪ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 15:25 IST
Last Updated 8 ಏಪ್ರಿಲ್ 2025, 15:25 IST
ಕುಮಾರ್ 
ಕುಮಾರ್    

ಬೆಂಗಳೂರು: ಭೂ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ ಎ.ವಿ. ಕುಮಾರ್ ಮತ್ತು ಇಬ್ಬರು ಕಾನ್‌ಸ್ಟೆಬಲ್‌ಗಳ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದು, ಪ್ರಕರಣದ ಆರೋಪಿಗಳನ್ನು ವರ್ಗಾವಣೆ ಮಾಡಿ ನಗರ ಪೊಲೀಸ್‌ ಕಮಿಷನರ್‌ ಬಿ.ದಯಾನಂದ ಅವರು ಆದೇಶಿಸಿದ್ದಾರೆ.

ನಗರದ ಪೊಲೀಸ್‌ ವಿಶೇಷ ಶಾಖೆಗೆ ಕುಮಾರ್ ಅವರನ್ನು ಅನ್ಯ ಕಾರ್ಯನಿಮಿತ್ತ (ಒಒಡಿ) ಮೇರೆಗೆ ವರ್ಗಾವಣೆ ಮಾಡಲಾಗಿದೆ. ಅದೇ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಉಮೇಶ್ ಹಾಗೂ ಅನಂತ್ ಅವರನ್ನೂ ಬೇರೆ ಬೇರೆ ಠಾಣೆಗಳಿಗೆ ವರ್ಗಾವಣೆ ಮಾಡಲಾಗಿದೆ.

ಪಶ್ಚಿಮ ವಿಭಾಗದ ಮಹಿಳಾ ಠಾಣೆ ಇನ್‌ಸ್ಪೆಕ್ಟರ್ ರವಿಕುಮಾರ್ ಅವರನ್ನು ಅನ್ನಪೂರ್ಣೇಶ್ವರಿ ನಗರ ಠಾಣೆಗೆ ವರ್ಗಾವಣೆ ಮಾಡಲಾಗಿದೆ.

ADVERTISEMENT

‘ಮೂವರ ವಿರುದ್ಧ ಏಪ್ರಿಲ್‌ 1ರಂದು ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಮೂವರನ್ನೂ ವರ್ಗಾವಣೆ ಮಾಡಲಾಗಿದೆ. ಲೋಕಾಯುಕ್ತ ಪೊಲೀಸರ ತನಿಖಾ ವರದಿ ಆಧರಿಸಿ ಮೂವರ ವಿರುದ್ಧ ಮುಂದೆ ಶಿಸ್ತು ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಮೂಲಗಳು ತಿಳಿಸಿವೆ.

ಲಂಚಕ್ಕಾಗಿ ಒತ್ತಡ ಹೇರಿ, ದೂರುದಾರರ ಕಟ್ಟಡವನ್ನು ಆರೋಪಿಗಳಲ್ಲಿ ಒಬ್ಬರ ಹೆಸರಿಗೆ ವರ್ಗಾವಣೆ ಮಾಡಿಕೊಳ್ಳಲು ಯತ್ನಿಸಿದ ಆರೋಪದಡಿ ಏಪ್ರಿಲ್‌ 1ರಂದು ಕೆಂಗೇರಿ ಮುಖ್ಯರಸ್ತೆಯ ಶ್ರೀಶೈಲ ಹೋಟೆಲ್‌ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ದಾಳಿ ವೇಳೆ ಕೆಲವು ದಾಖಲೆಗಳನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ದಾಳಿಗೂ ಮುನ್ನ ಕುಮಾರ್‌ ಮತ್ತು ಇತರರ ವಿರುದ್ಧ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.