ನಾಲ್ವರು ಹೈಕೋರ್ಟ್ ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ವಕೀಲರ ಪ್ರತಿಭಟನೆ
ಬೆಂಗಳೂರು: ಕರ್ನಾಟಕ ಹೈಕೋರ್ಟ್ನ ನಾಲ್ವರು ನ್ಯಾಯಮೂರ್ತಿಗಳಾದ ಕೆ.ನಟರಾಜನ್, ಹೇಮಂತ ಚಂದನ ಗೌಡರ್, ಎನ್.ಎಸ್.ಸಂಜಯಗೌಡ ಹಾಗೂ ಕೃಷ್ಣ ಎಸ್.ದೀಕ್ಷಿತ್ ಅವರ ಹಠಾತ್ ವರ್ಗಾವಣೆ ವಿರೋಧಿಸಿ, ಬೆಂಗಳೂರು ವಕೀಲರ ಸಂಘ (ಎಎಬಿ), ಹೈಕೋರ್ಟ್ನ ಪದಾಂಕಿತ ಹಿರಿಯ ಹಾಗೂ ಎಲ್ಲ ವಕೀಲರು ಮಂಗಳವಾರ ಪ್ರತಿಭಟನೆ ಆರಂಭಿಸಿದ್ದಾರೆ.
ಪ್ರತಿಭಟನೆಯ ಅಂಗವಾಗಿ ‘ನಮಗೆ ನ್ಯಾಯ ಬೇಕು’ ಎಂಬ ಘೋಷಣೆಗಳನ್ನು ಕೂಗುತ್ತಾ ಹೈಕೋರ್ಟ್ ಗೋಲ್ಡನ್ ಗೇಟ್ ಮುಂಭಾಗದಲ್ಲಿ ಕುಳಿತು ಬೆಳಿಗ್ಗೆ 10.30 ರಿಂದ 11.30 ರವರೆಗೆ ಶಾಂತಿಯುತ ಪ್ರತಿಭಟನೆ ನಡೆಸಿದರು.
ಎಎಬಿ ಅಧ್ಯಕ್ಷ ವಿವೇಕ ರೆಡ್ಡಿ, ಉಪಾಧ್ಯಕ್ಷ ಗಿರೀಶ್ ಕುಮಾರ್, ಪ್ರಧಾನ ಕಾರ್ಯದರ್ಶಿ ಎಚ್.ವಿ.ಪ್ರವೀಣ್ ಗೌಡ ಮತ್ತು ಖಜಾಂಚಿ ಶ್ವೇತಾ ರವಿಶಂಕರ್ ಸೇರಿದಂತೆ ಮಾಜಿ ಅಡ್ವೊಕೇಟ್ ಜನರಲ್ ಗಳಾದ ಬಿ.ವಿ.ಆಚಾರ್ಯ, ಉದಯ ಹೊಳ್ಳ, ಮಾಜಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ.ನರಗುಂದ ಸೇರಿದಂತೆ ನೂರಾರು ಹಿರಿ-ಕಿರಿಯ ವಕೀಲರು ಪಾಲ್ಗೊಂಡಿದ್ದರು. ಒಂದು ಗಂಟೆ ಕಾಲದಿಂದ ವಕೀಲರು ಕಲಾಪದಿಂದ ಹೊರಗುಳಿದಿದ್ದರು.
ತುರ್ತು ಸಾಮಾನ್ಯ ಸಭೆ: ನ್ಯಾಯಮೂರ್ತಿಗಳ ವರ್ಗಾವಣೆ ವಿರೋಧಿಸಿ ಹೆಜ್ಜೆ ಇರಿಸಬಹುದಾದ ಮುಂದಿನ ಕ್ರಮಗಳ ಬಗ್ಗೆ ಚರ್ಚಿಸಲು ಮಧ್ಯಾಹ್ನ 1.30ಕ್ಕೆ ಎಎಬಿ ಸಾಮಾನ್ಯ ಸಭೆಯನ್ನು ಕರೆಯಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.