ADVERTISEMENT

ದ್ವೇಷ ವಿಚಾರ ಪೋಸ್ಟ್‌ ಹಂಚಿಕೊಳ್ಳುವವರ ವಿರುದ್ಧ ಕಾನೂನು ಕ್ರಮ: ಪರಮೇಶ್ವರ

​ಪ್ರಜಾವಾಣಿ ವಾರ್ತೆ
Published 18 ಜನವರಿ 2026, 15:50 IST
Last Updated 18 ಜನವರಿ 2026, 15:50 IST
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಡಾ.ಎಂ.ಎ.ಸಲೀಂ, ಜಿ.ಪರಮೇಶ್ವರ, ಪ್ರಶಾಂತ್ ಕುಮಾರ್ ಠಾಕೂರ್ ಪಾಲ್ಗೊಂಡಿದ್ದರು. 
ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಡಾ.ಎಂ.ಎ.ಸಲೀಂ, ಜಿ.ಪರಮೇಶ್ವರ, ಪ್ರಶಾಂತ್ ಕುಮಾರ್ ಠಾಕೂರ್ ಪಾಲ್ಗೊಂಡಿದ್ದರು.     

ಬೆಂಗಳೂರು: ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ ಮೂಡಿಸುವಂತ ವಿಚಾರಗಳನ್ನು ಪೋಸ್ಟ್ ಮಾಡಲಾಗುತ್ತಿದೆ. ಇದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗಿ ಗಲಭೆಗಳಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕೂಡಲೇ ಕಾನೂನು ಕ್ರಮ ಜರುಗಿಸಿ, ಆರಂಭಿಕ ಹಂತದಲ್ಲೇ ಮಟ್ಟ ಹಾಕಬೇಕು ಎಂದು ಗೃಹ ಸಚಿವ ಜಿ.ಪರಮೇಶ್ವರ ಸೂಚನೆ ನೀಡಿದರು.

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯಲ್ಲಿ ನಡೆದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದ 2ನೇ ದಿನವಾದ ಭಾನುವಾರ ಅಧಿಕಾರಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ತಡೆಗಟ್ಟಿ ಸಾಮಾಜಿಕ ನ್ಯಾಯ ಒದಗಿಸುವ ಉದ್ದೇಶದಿಂದ ಸ್ಥಾಪಿಸಿರುವ ಡಿಸಿಆರ್‌ಇ ಪೊಲೀಸ್ ಠಾಣೆ ಹೆಚ್ಚು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಶೋಷಿತರೊಂದಿಗೆ ನಾವಿದ್ದೇವೆ ಎಂಬ ಭರವಸೆ ಮೂಡಿಸಬೇಕು. ‌ಅಂತರ್ಜಾತಿ ವಿವಾಹವಾದ ಯುವತಿಯನ್ನು ಆಕೆಯ ತಂದೆಯೇ ಕೊಲೆ ಮಾಡುತ್ತಾನೆ ಎಂದರೆ ಹೇಗೆ ಸಹಿಸುವುದು’ ಎಂದು ಪ್ರಶ್ನಿಸಿದರು.

ADVERTISEMENT

‘ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮವಾಗಿರುವುದರಿಂದಲೇ ಕಳೆದ ವರ್ಷ ₹10 ಲಕ್ಷ ಕೋಟಿ ಹೂಡಿಕೆಯಾಗಿದೆ’ ಎಂದು ತಿಳಿಸಿದರು.

ಡ್ರಗ್ಸ್ ದಂಧೆ, ಸೈಬರ್ ಅಪರಾಧಗಳನ್ನು ಮಟ್ಟಹಾಕುವುದು ಸವಾಲಾಗುತ್ತಿದೆ. ಇಲಾಖೆಯು ತಾಂತ್ರಿಕವಾಗಿ ಬಲಗೊಳ್ಳಬೇಕು. ಹೊಸ ತಂತ್ರಜ್ಞಾನ, ಆವಿಷ್ಕಾರಗಳನ್ನು ಅಳವಡಿಸಿಕೊಂಡು ಡ್ರಗ್ಸ್ ದಂಧೆ ಮತ್ತು ಸೈಬರ್ ಅಪರಾಧಗಳನ್ನು ಮಟ್ಟ ಹಾಕಬೇಕು ಎಂದು ಹೇಳಿದರು. ಸಮಾವೇಶದಲ್ಲಿ ಚರ್ಚೆಯಾಗಿರುವ ವಿಚಾರಗಳು ಕೆಳಹಂತದ ಸಿಬ್ಬಂದಿಗಳಿಗೆ ತಲುಪಬೇಕು. ಆಗ ಮಾತ್ರ ರಾಜ್ಯ ಪೊಲೀಸರ ಕಾರ್ಯಕ್ಷಮತೆ ಹೆಚ್ಚಿಸಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿಗಳು ಶಾಲಾ- ಕಾಲೇಜುಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು, ಉಪನ್ಯಾಸ ನೀಡಬೇಕು. ಎಲ್ಲ ಅಧಿಕಾರಿಗಳು ಸಭೆಯಿಂದ ಹೋಗುವ ಮೊದಲು, 'ಡ್ರಗ್ಸ್ ದಂಧೆಯನ್ನು ಸಂಪೂರ್ಣವಾಗಿ ಮಟ್ಟ ಹಾಕುತ್ತೇವೆ' ಎಂದು ಆತ್ಮಸಾಕ್ಷಿಯಿಂದ ಪ್ರಮಾಣ ಮಾಡಬೇಕು ಎಂದರು.

ರಾಜ್ಯ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ, ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯ ಮಹಾನಿರ್ದೇಶಕ ಪ್ರಶಾಂತ್ ಕುಮಾರ್ ಠಾಕೂರ್, ಡಿಜಿಪಿ ಪ್ರಣವ್ ಮೊಹಾಂತಿ, ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆರ್.ಹಿತೇಂದ್ರ, ಗುಪ್ತವಾರ್ತೆ ಎಡಿಜಿಪಿ ರವಿ, ಬೆಂಗಳೂರು ನಗರ ಪೊಲೀಸ್ ಕಮೀಷನರ್ ಸೀಮಾಂತ್ ಕುಮಾರ್ ಸಿಂಗ್ ಹಾಜರಿದ್ದರು. 

‘ಯಾರು ಎಲ್ಲಿಂದ ಬರ್ತಾರೆ ತಿಳಿದುಕೊಳ್ಳಲು ಆಗುವುದಿಲ್ಲವೇ?’

ರಾಜ್ಯದಲ್ಲಿ ಲಕ್ಷಾಂತರ ಅಕ್ರಮ ಬಾಂಗ್ಲಾ ವಲಸಿಗರು ನೆಲೆಸಿದ್ದಾರೆ ಎಂದು ವರದಿಯಾಗುತ್ತಿದೆ. ಸ್ಥಳೀಯ ಪೊಲೀಸರು ಏನು ಮಾಡುತ್ತಿದ್ದಾರೆ? ಪ್ರತಿಯೊಂದು ಪ್ರದೇಶದ ಮಾಹಿತಿ ಪೊಲೀಸರಿಗೆ ಗೊತ್ತಿರಬೇಕು ಎಂಬ ಉದ್ದೇಶದಿಂದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮ ಜಾರಿಗೆ ತರಲಾಗಿದೆ. ಯಾರು ಎಲ್ಲಿಂದ ಬಂದಿದ್ದಾರೆ ಎಂದು ಪೊಲೀಸ್ ಠಾಣೆ ಹಂತದಲ್ಲಿ ತಿಳಿದುಕೊಳ್ಳಲು ಆಗುವುದಿಲ್ಲವೆ? ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

‘ಸಮಾಜಘಾತುಕರೊಂದಿಗೆ ಕೈಜೋಡಿಸದಂತೆ ಪ್ರತಿ ಸಭೆಯಲ್ಲಿಯೂ ಎಚ್ಚರಿಸುತ್ತಿದ್ದರೂ ಅದು ಮರುಕಳಿಸುತ್ತಿದೆ. ಠಾಣೆಯಲ್ಲಿ ಕುಳಿತು ಅಕ್ರಮ ವ್ಯವಹಾರ ನಡೆಸುವುದನ್ನು ಸಹಿಸುವುದಿಲ್ಲ‌‌. ಅಂಥವರ ಅನಿವಾರ್ಯತೆ ಇಲಾಖೆಗೆ ಇಲ್ಲ‌. ರೌಡಿಗಳ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪೊಲೀಸ್ ಅಧಿಕಾರಿಗಳು ಪಾಲ್ಗೊಳ್ಳುತ್ತಿದ್ದಾರೆ. ಇದೆಲ್ಲವನ್ನು ನೋಡಿಕೊಂಡು ಸುಮ್ಮನಿರಬೇಕೆ? ಅಧಿಕಾರಿಗಳು ಎಚ್ಚೆತ್ತುಕೊಳ್ಳದಿದ್ದರೆ ಮತ್ತಷ್ಟು ಕಠಿಣ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.