ಬೆಂಗಳೂರು: ರಾಜ್ಯದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಮೆಗಾ ಇ–ಲೋಕ್ ಅದಾಲತ್ನಲ್ಲಿ ಸುಮಾರು 1.9 ಲಕ್ಷ ಪ್ರಕರಣಗಳ ವಿಚಾರಣೆ ನಡೆಸಲಾಗಿದೆ ಎಂದು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯನಿರ್ವಾಹಕ ಅಧ್ಯಕ್ಷ ನ್ಯಾಯಮೂರ್ತಿ ಎನ್.ವಿ. ರಮಣ ಹೇಳಿದರು.
ಇ–ಲೋಕ್ ಅದಾಲತ್ಗೆ ಶನಿವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ ಅವರು, ‘ಇ-ಲೋಕ ಅದಾಲತ್ ಪರಿಚಯಿಸಲು ಕರ್ನಾಟಕ ಅಗಾಧ ಸಾಮರ್ಥ್ಯ ಹೊಂದಿದೆ’ ಎಂದರು.
‘ಸಾಂಕ್ರಾಮಿಕ ರೋಗವು ನ್ಯಾಯಾಲಯಗಳಲ್ಲಿ ತಂತ್ರಜ್ಞಾನ ಅಳವಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ. ದಕ್ಷಿಣ ರಾಜ್ಯಗಳಲ್ಲಿ ಅತಿ ಹೆಚ್ಚು ಪ್ರಕರಣಗಳು ಬಾಕಿ ಇರುವ ರಾಜ್ಯ ಕರ್ನಾಟಕ. ಸುಮಾರು 17.59 ಲಕ್ಷ ಪ್ರಕರಣಗಳು ರಾಜ್ಯದ ಅಧೀನ ನ್ಯಾಯಾಲಯಗಳ ಮುಂದಿವೆ. ಮೊಕದ್ದಮೆ ಹೂಡುವ ಹಂತದಲ್ಲಿಯೇ ಪ್ರಕರಣಗಳನ್ನು ಇತ್ಯರ್ಥಪಡಿಸಲು ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಲು ಇದು ಸಕಾಲ’ ಎಂದು ಅಭಿಪ್ರಾಯಪಟ್ಟರು.
‘ಇ–ಲೋಕ್ ಅದಾಲತ್ನಲ್ಲಿ ಪ್ರಕರಣಗಳು ಇತ್ಯರ್ಥವಾದರೆ ನ್ಯಾಯಾಲಯಗಳ ಮೇಲಿನ ಒತ್ತಡ ಕಡಿಮೆಯಾಗಲಿದೆ.ವಿಡಿಯೊ ಕಾನ್ಫರೆನ್ಸ್ ಸೌಲಭ್ಯಗಳು ಗ್ರಾಮೀಣ ಜನರಿಗೆ ಲಭ್ಯವಾಗುವಂತೆ ಮೂಲಸೌಕರ್ಯವನ್ನುಜಿಲ್ಲಾ ಮತ್ತು ತಾಲ್ಲೂಕು ಕಾನೂನು ಸೇವಾ ಅಧಿಕಾರಿಗಳು ಬಲಪಡಿಸಬೇಕು’ ಎಂದರು.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ, ‘ಲಾಕ್ಡೌನ್ ಅವಧಿಯಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿ ಸಕ್ರಿಯವಾಗಿ ಕಾರ್ಯನಿರ್ವಹಿಸಿತು. ಆದರೂ, ಸಾಂಕ್ರಾಮಿಕ ರೋಗದ ಕಾರಣದಿಂದ ನ್ಯಾಯಾಲಯದಲ್ಲಿ ಸಾಕ್ಷ್ಯದ ಪುರಾವೆ ಪ್ರಸ್ತುತ ಪಡಿಸುವುದು ಸಾಧ್ಯವಾಗದ ಕಾರಣ ಪ್ರಕರಣಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗಿದೆ. ವಿಡಿಯೊ ಕಾನ್ಫೆರೆನ್ಸ್ ಮೂಲಕ ವಿಚಾರಣೆ ನಡೆಸುವುದು ಸೂಕ್ತ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.