ADVERTISEMENT

ಜ. 30ರಿಂದ ‘ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ’

​ಪ್ರಜಾವಾಣಿ ವಾರ್ತೆ
Published 29 ಜನವರಿ 2025, 16:18 IST
Last Updated 29 ಜನವರಿ 2025, 16:18 IST
   

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಜನವರಿ 30ರಿಂದ ಫೆಬ್ರುವರಿ 13ರವರೆಗೆ ಕುಷ್ಠರೋಗದ ಕುರಿತು ಜಾಗೃತಿ ಆಂದೋಲನ ನಡೆಸಲಾಗುತ್ತದೆ ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿ ಡಾ. ಸಿರಾಜುದ್ದೀನ್ ಮದನಿ ತಿಳಿಸಿದ್ದಾರೆ.

2019ರ ಏಪ್ರಿಲ್‌ನಿಂದ 2024ರ ಡಿಸೆಂಬರ್‌ ಅಂತ್ಯದವರೆಗೆ 341 ಕುಷ್ಠರೋಗ ಪ್ರಕರಣಗಳು ದಾಖಲಾಗಿವೆ. ಮೈಕ್ರೊ ಬ್ಯಾಕ್ಟೀರಿಯಂ ಲೆಪ್ರೆ ಎಂಬ ರೋಗಾಣುವು ಶರೀರ ಪ್ರವೇಶಿಸಿದಾಗ ಈ ರೋಗ ಉಂಟಾಗುತ್ತದೆ. ಮೂರು ವರ್ಷದೊಳಗೆ ಸ್ಪರ್ಶಜ್ಞಾನ ಕಳೆದುಕೊಂಡ ಮಚ್ಚೆಗಳು ಉದ್ಭವಿಸುವುದು ರೋಗದ ಮುಖ್ಯ ಲಕ್ಷಣ ಎಂದು ಅವರು ಮಾಹಿತಿ ನೀಡಿದ್ದಾರೆ.

2016-17ರ ಸಾಲಿನಿಂದ ಪಾಲಿಕೆ ವ್ಯಾಪ್ತಿಯಲ್ಲಿ ಕುಷ್ಠರೋಗ ನಿರ್ಮೂಲನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. 144 ಆರೋಗ್ಯ ಕೇಂದ್ರಗಳು, ಐದು ಸಾರ್ವಜನಿಕ ಆಸ್ಪತ್ರೆಗಳು, ಎಂಟು ವೈದ್ಯಕೀಯ ಕಾಲೇಜು/ಆಸ್ಪತ್ರೆಗಳು, ಎರಡು ಸ್ವಯಂಸೇವಾ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದ್ದಾರೆ.

ADVERTISEMENT

ಕುಷ್ಠರೋಗ ನಿರ್ಮೂಲನಕ್ಕೆ ಮುಂದಾಗಿರುವ ಪಾಲಿಕೆಯ ಆರೋಗ್ಯ ವಿಭಾಗ, ‘ಒಟ್ಟಾಗಿ ನಾವು ಕುಷ್ಠರೋಗದ ಬಗ್ಗೆ ಜಾಗೃತಿ ಮೂಡಿಸೋಣ, ತಪ್ಪು ಕಲ್ಪನೆಗಳನ್ನು ಹೋಗಲಾಡಿಸೋಣ ಮತ್ತು ಕುಷ್ಠರೋಗದಿಂದ ಯಾರೂ ಬಾಧಿತರಾಗದಂತೆ ನೋಡಿಕೊಳ್ಳೋಣ’ ಶೀರ್ಷಿಕೆಯಡಿ ಜಾಗೃತಿ ಆಂದೋಲನ ಹಮ್ಮಿಕೊಂಡಿದೆ.

‘ಎಲ್ಲಾ ವೈದ್ಯರು ಹಾಗೂ ಪಾಲಿಕೆಯ ಸಿಬ್ಬಂದಿ, ‘ಕುಷ್ಠರೋಗ ಮುಕ್ತ ಪಾಲಿಕೆ’ ನಿರ್ಮಾಣದ ಪ್ರತಿಜ್ಞೆ ಸ್ವೀಕರಿಸಲಿದ್ದಾರೆ. ಆಂದೋಲನದ ಮೂಲಕ ಜನರನ್ನು ಸಂಪರ್ಕಿಸಿ, ರೋಗದ ಲಕ್ಷಣ ಹಾಗೂ ಚಿಕಿತ್ಸೆ ಕುರಿತು ಅರಿವು ಮೂಡಿಸಲಾಗುವುದು. ಕುಷ್ಠರೋಗ ಪತ್ತೆ ಕಾರ್ಯ ಸಹ ನಡೆಸಲಾಗುವುದು’ ಎಂದು ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ. ಗಿರೀಶ್ ಹೇಳಿದ್ದಾರೆ.

==

ಕ್ಷಯರೋಗ ಮುಕ್ತ ಭಾರತ ಅಭಿಯಾನ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕ್ಷಯ ರೋಗ ಮುಕ್ತ ಅಭಿಯಾನ ನಡೆಯುತ್ತಿದ್ದು, ಎಲ್ಲರೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದು ಆರೋಗ್ಯ ವಿಭಾಗದ ವಿಶೇಷ ಆಯುಕ್ತ ಸುರಳ್ಕರ್ ವಿಕಾಸ್ ಕಿಶೋರ್ ಮನವಿ ಮಾಡಿಕೊಂಡಿದ್ದಾರೆ.

ಬಿಬಿಎಂಪಿಯು ವಿವೇಕಾನಂದ ಯೂತ್ ಮೂಮೆಂಟ್ ಸಂಸ್ಥೆಯವರ ಸಹಯೋಗದೊಂದಿಗೆ ‘ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ'ದ ಪಾಲುದಾರರ ಜೊತೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

ಪಾಲಿಕೆ ವ್ಯಾಪ್ತಿಯಲ್ಲಿ ಕ್ಷಯ ರೋಗ ನಿರ್ಮೂಲನೆ ಮಾಡಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. 100 ದಿನಗಳ ಕ್ಷಯರೋಗ ಅಭಿಯಾನದಲ್ಲಿ ಈಗಾಗಲೇ 50 ದಿನಗಳು ಮುಗಿದಿದ್ದು, ಬಾಕಿಯಿರುವ ದಿನಗಳಲ್ಲಿ ರೋಗ ನಿಯಂತ್ರಣದ ಬಗ್ಗೆ ಅರಿವು ಮೂಡಿಸಿ ‘ಕ್ಷಯ ಮುಕ್ತ ನಗರ’ವನ್ನಾಗಿಸಬೇಕು ಎಂದು ಅವರು ಹೇಳಿದರು.

ಪಾಲಿಕೆಯ ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ನಮ್ಮ ಕ್ಲಿನಿಕ್‌ ಹಾಗೂ ಹೆರಿಗೆ ಆಸ್ಪತ್ರೆಗಳಲ್ಲಿ ಕ್ಷಯ ರೋಗಕ್ಕೆ ಉಚಿತ ಚಿಕಿತ್ಸೆ ನೀಡಲಾಗುತ್ತದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.