ಬೆಂಗಳೂರು: ಕನಿಷ್ಠ ವೇತನ ₹25 ಸಾವಿರ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಜನರಲ್ ಲೇಬರ್ ಯೂನಿಯನ್ ನೇತೃತ್ವದಲ್ಲಿ ಗ್ರಂಥಾಲಯ ಶುಚಿ ಕಾರ್ಮಿಕರು ಸ್ವಾತಂತ್ರ್ಯ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ಕನಿಷ್ಠ ವೇತನ, ಆರ್ಥಿಕ ಭದ್ರತೆ, ನಿವೃತ್ತ ಕಾರ್ಮಿಕರಿಗೆ ಪಿಂಚಣಿ, ಬೋನಸ್ ಹಾಗೂ ಇತರೆ ಸೌಲಭ್ಯಗಳನ್ನು ಒದಗಿಸಿಲ್ಲ. ಗ್ರಂಥಾಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಶುಚಿ ಕಾರ್ಮಿಕರನ್ನು ಕಾರ್ಮಿಕರೆಂದು ಪರಿಗಣಿಸಿ, ಎಲ್ಲ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.
ಮಾಸಿಕ ₹14,500 ವೇತನದಲ್ಲಿ ಬೆಂಗಳೂರು ನಗರದಲ್ಲಿ ಮನೆ ಬಾಡಿಗೆ, ಮಕ್ಕಳ ಶಿಕ್ಷಣ, ನಿತ್ಯದ ಖರ್ಚು ನಿಭಾಯಿಸಲು ಕಷ್ಟ. ಶುಚಿ ಕಾರ್ಮಿಕರು ಬಹುತೇಕರು ಮಹಿಳೆಯರಾಗಿದ್ದು, ಕಾನೂನಾತ್ಮಕವಾಗಿ ವೇತನ ಸಹಿತ ಹೆರಿಗೆ ರಜೆ ನೀಡಬೇಕು. ನಗರ ಸ್ಥಳಿಯ ಸಂಸ್ಥೆಗಳು ಮತ್ತು ಪಿಆರ್ಐಗಳಲ್ಲಿ ಉದ್ಯೋಗ ಅಡಿ ಪೌರಕಾರ್ಮಿಕರಿಗೆ ನೀಡುತ್ತಿರುವ ಕನಿಷ್ಠ ವೇತನವನ್ನು ನಮಗೂ ನೀಡಬೇಕು. ಗುರುತಿನ ಚೀಟಿ, ಇಎಸ್ಐ, ಪಿಎಫ್ ಹಾಗೂ ಇತರೆ ಸೌಲಭ್ಯ ಕಲ್ಪಿಸಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದರು.
ಕೆಲಸದ ಅವಧಿಯಲ್ಲಿ ಮೃತಪಟ್ಟಲ್ಲಿ ಪರಿಹಾರ ಧನ ಹಾಗೂ ಅವಲಂಬಿತರಿಗೆ ಅನುಕಂಪ ನೇಮಕಾತಿ ನೀಡಬೇಕು. ನಿವೃತ್ತರಿಗೆ ಪಿಂಚಣಿ ಅಥವಾ ಪರಿಹಾರ ಧನ ನೀಡಬೇಕು ಎಂದು ಕೋರಿದರು.
ಪ್ರತಿಭಟನೆಯಲ್ಲಿ ಎಐಸಿಟಿಯು ಜಿಲ್ಲಾ ಅಧ್ಯಕ್ಷೆ ನಿರ್ಮಲಾ, ಜಿಲ್ಲಾ ಕಾರ್ಯದರ್ಶಿ ಅಶೋಕ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.