ಬೆಂಗಳೂರು: ಮೈಕ್ರೊ ಫೈನಾನ್ಸ್ (ಕಿರು ಹಣಕಾಸು ಸಂಸ್ಥೆ) ಕಂಪನಿಗಳಿಂದ ಪಡೆದ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಋಣಮುಕ್ತ ಹೋರಾಟ ಸಮಿತಿ ವತಿಯಿಂದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಪ್ರತಿಭಟನೆ ನಡೆಯಿತು.
ಹಲವು ಜಿಲ್ಲೆಗಳ ನೂರಾರು ಮಹಿಳೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದರು. ಆರ್ಬಿಐ ನೀಡದ ಪರವಾನಗಿ ಉಲ್ಲಂಘಿಸಿ, ಅಕ್ರಮ ರೀತಿಯಲ್ಲಿ ಬಡ್ಡಿ ವಿಧಿಸುವ ಮೈಕ್ರೊ ಫೈನಾನ್ಸ್ ಸಂಸ್ಥೆಗಳಿಗೆ ಕಡಿವಾಣ ಹಾಕಬೇಕು ಹಾಗೂ ಸಾಲ ಸಂಕಷ್ಟದಿಂದ ಪಾರು ಮಾಡಬೇಕು ಎಂದು ಪ್ರತಿಭಟನಕಾರರು ಆಗ್ರಹಿಸಿದರು. ಸಾಲ ವಸೂಲಿಗೆ ಬರುವವವರು ಕಿರುಕುಳ ನೀಡುತ್ತಿದ್ದಾರೆ ಎಂದೂ ದೂರಿದರು.
ದೇಶದಲ್ಲಿ ಮಹಿಳೆಯರಿಗೆ ದುಡಿಯುವ ಅವಕಾಶ ಕಡಿಮೆಯಾಗಿದೆ. ಹೀಗಾಗಿ, ಮೈಕ್ರೊ ಫೈನಾನ್ಸ್ ಕಂಪನಿಗಳ ಸಾಲವನ್ನು ಋಣ ಮುಕ್ತ ಕಾಯ್ದೆಯ ವ್ಯಾಪ್ತಿಗೆ ತಂದು ಸಾಲಮನ್ನಾ ಮಾಡಬೇಕು. ಸಾಲ ವಸೂಲಾತಿ ಹಿನ್ನೆಲೆಯಲ್ಲಿ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಮೊಕದ್ದಮೆ ದಾಖಲಿಸಿ ನ್ಯಾಯ ದೊರಕಿಸಿ ಕೊಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಬಂದ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, 'ಮೈಕ್ರೊ ಫೈನಾನ್ಸ್ ಸಾಲಗಳ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ರಿಸರ್ವ್ ಬ್ಯಾಂಕ್ ಅಧಿಕಾರಿಗಳ ಜತೆ ಮಾರ್ಚ್ ಮೊದಲ ವಾರದಲ್ಲಿ ಸಭೆ ನಡೆಸಲಾಗುವುದು. ಮಹಿಳೆಯರ ಮೇಲೆ ದೌರ್ಜನ್ಯ ನಡೆಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಗೃಹ ಇಲಾಖೆಗೆ ಪತ್ರ ಬರೆಯಲಾಗುವುದು' ಎಂದು ಭರವಸೆ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.