ಬೆಂಗಳೂರು:ಮೊಹರಂ ಪ್ರಯುಕ್ತ ನಗರದ ಜಾನ್ಸನ್ ಮಾರುಕಟ್ಟೆ ಬಳಿ ಮಂಗಳವಾರ ಶಿಯಾ ಮುಸ್ಲಿಮರು ಮೆರವಣಿಗೆ ನಡೆಸಿದರು. ಶೋಕದ ಸಂಕೇತವಾಗಿ ನಡೆದ ಮೆರವಣಿಗೆಯಲ್ಲಿ ಕಪ್ಪು ಬಟ್ಟೆ ಧರಿಸಿ ಸಾವಿರಾರು ಮಂದಿ ಭಾಗವಹಿಸಿದ್ದರು.
ಹೊಸೂರು ರಸ್ತೆಯಲ್ಲಿ ‘ಅಂಜುಮಾನ್ ಎ ಇಮಾಮಿ’ ಮೆರವಣಿಗೆಯನ್ನು ಆಯೋಜಿಸಿತ್ತು. ಮಾರುಕಟ್ಟೆಯ ಅಕ್ಕ–ಪಕ್ಕದ ರಸ್ತೆಯಲ್ಲಿ ಮಧ್ಯಾಹ್ನ 1.30ರಿಂದ 3.30ರವರೆಗೆ ವಾಹನ ಸಂಚಾರ ನಿರ್ಬಂಧಿಸಲಾಗಿತ್ತು.ಇರಾನಿಯರು, ಲಡಾಖ್–ಕಾರ್ಗಿಲ್ನ ಮುಸ್ಲಿಮರು ಸೇರಿ ಮೂರು ಸಾವಿರಕ್ಕೂ ಹೆಚ್ಚು ಜನ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.
ದೇಹದಂಡನೆ: ಮಕ್ಕಳು, ಯುವಕರು ಮತ್ತು ವೃದ್ಧರು ದೇಹದಂಡನೆ ಮಾಡಿ ಕೊಂಡರು. ‘ಆಲಿ ದೂಲಾ’ ಎಂದು ಕೂಗುತ್ತಾ ದಾರಕ್ಕೆ ಕಟ್ಟಿದ್ದ ಬ್ಲೇಡ್ಗಳ ಗೊಂಚಲನ್ನು ತಮ್ಮ ಎದೆ ಹಾಗೂ ಬೆನ್ನಿಗೆ ಬಡಿದುಕೊಂಡರು. ಅವರ ದೇಹದಿಂದ ರಕ್ತ ಚಿಮ್ಮುತ್ತಿತ್ತು. ಬಹುತೇಕರು ಎದೆಗೆ ಕೈಗಳಿಂದ ಬಡಿದು ಕೊಂಡು ಶೋಕ ಗೀತೆಗಳನ್ನು ಹಾಡಿದರು.
ಮೆರವಣಿಗೆಗೆ ಮೊದಲು ಜಾನ್ಸನ್ ಮಾರುಕಟ್ಟೆ ಬಳಿ ಅಲಿ ಅಸ್ಕರ್ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ ನಡೆಯಿತು. ಮುಂಜಾಗ್ರತೆಯಾಗಿ ಪೊಲೀಸರು ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಿದ್ದರು. ಆಂಬುಲೆನ್ಸ್ ನಿಯೋಜಿಸಲಾಗಿತ್ತು.
‘ಪ್ರವಾದಿ ಮಹಮ್ಮದ್ ಪೈಗಂಬರ್ ಅವರ ಮೊಮ್ಮಕ್ಕಳಾದ ಹಸನ್–ಹುಸೇನ್ ಧರ್ಮದ ಉಳಿವಿಗಾಗಿ ಹಾಗೂ ನ್ಯಾಯಕ್ಕಾಗಿ ಹೋರಾಡಿ ಯುದ್ಧದಲ್ಲಿ ಮರಣ ಹೊಂದಿದರು. ಅವರ ಸ್ಮರಣಾರ್ಥ ಮೊಹರಂ ನಡೆಯಲಿದೆ’ ಎಂದು ಮುಖಂಡರೊಬ್ಬರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.