ಬೆಂಗಳೂರು: ಸೌಹಾರ್ದ ಸಂಸ್ಕೃತಿ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಿಗೆ ವಿರುದ್ಧವಾಗಿರುವ ಬಿಜೆಪಿ–ಜೆಡಿಎಸ್ ಮೈತ್ರಿಕೂಟವನ್ನು ಲೋಕಸಭಾ ಚುನಾವಣೆಯಲ್ಲಿ ತಿರಸ್ಕರಿಸಬೇಕು ಎಂದು ಸೌಹಾರ್ದ ಕರ್ನಾಟಕ ಸಂಘಟನೆಯು ಮತದಾರರಿಗೆ ಕೋರಿದೆ.
ಸೌಹಾರ್ದ ಕರ್ನಾಟಕ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಸಾಹಿತಿಗಳಾದ ಬರಗೂರು ರಾಮಚಂದ್ರಪ್ಪ, ಜಿ.ರಾಮಕೃಷ್ಣ, ಕೆ. ಮರುಳಸಿದ್ದಪ್ಪ, ದೇವನೂರ ಮಹಾದೇವ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ಸೇರಿದಂತೆ ಹಲವು ಬರಹಗಾರರು, ಹೋರಾಟಗಾರರು, ದಲಿತ, ರೈತ, ಕಾರ್ಮಿಕ, ಮಹಿಳಾ ಸಂಘಟನೆಗಳ ಮುಖಂಡರು ಜಂಟಿ ಸಹಿಯೊಂದಿಗೆ ಭಾನುವಾರ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದಾರೆ.
‘ಸರ್ವ ಜನಾಂಗದ ಶಾಂತಿಯ ತೋಟವಾಗಿರುವ ಕರ್ನಾಟಕದಲ್ಲಿ ದೇವರು, ಧರ್ಮದ ಹೆಸರಿನಲ್ಲಿ ಜನರ ಭಾವನೆಗಳನ್ನು ಕೆರಳಿಸುವ ರಾಜಕೀಯವನ್ನು ಬೆಂಬಲಿಸಬಾರದು. ಊಟ, ಉಡುಪಿನ ವಿಚಾರದಲ್ಲೂ ವಿವಾದ ಸೃಷ್ಟಿಸುವವರಿಗೆ ಅವಕಾಶ ನೀಡಬಾರದು. ಭ್ರಷ್ಟ, ಕಾರ್ಪೋರೇಟ್– ಕೋಮುವಾದಿ ಮತ್ತು ಜಾತಿವಾದಿ ಕೂಟವನ್ನು ಈ ಚುನಾವಣೆಯಲ್ಲಿ ಸೋಲಿಸಬೇಕು’ ಎಂದು ಮನವಿ ಮಾಡಿದ್ದಾರೆ.
ಸಾಮರಸ್ಯ, ಸಹಬಾಳ್ವೆ, ಜಾತ್ಯತೀತ ತತ್ವ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳನ್ನು ರಕ್ಷಿಸುವ ದೃಢವಾದ ನಿರ್ಧಾರದೊಂದಿಗೆ ಮತ ಚಲಾಯಿಸಬೇಕು ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.