ಬೆಂಗಳೂರು: ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸಲು ₹ 3.80 ಲಕ್ಷ ಲಂಚ ಪಡೆದ ಬೆಸ್ಕಾಂನ ಕಗ್ಗಲಿಪುರ ಉಪ ವಿಭಾಗದ ಅಗರ ಕಾರ್ಯಾಚರಣೆ ಮತ್ತು ನಿರ್ವಹಣಾ ವಿಭಾಗದ ಸಹಾಯಕ ಎಂಜಿನಿಯರ್ ಯತೀಶ್ ಪಾಳೇಗಾರ್ ಅವರನ್ನು ಲೋಕಾಯುಕ್ತ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಚಂದನ್ ಕುಮಾರ್ ಎಸ್. ಎಂಬುವವರು ಕಟ್ಟಡವೊಂದಕ್ಕೆ ವಿದ್ಯುತ್ ಸಂಪರ್ಕ ಕೋರಿ ಅರ್ಜಿ ಸಲ್ಲಿಸಿದ್ದರು. ವಿದ್ಯುತ್ ಸಂಪರ್ಕ ಕಲ್ಪಿಸಲು ₹ 5 ಲಕ್ಷ ಲಂಚ ಕೊಡುವಂತೆ ಸಹಾಯಕ ಎಂಜಿನಿಯರ್ (ಎ.ಇ) ಬೇಡಿಕೆ ಇಟ್ಟಿದ್ದರು. ನಂತರ ಚೌಕಾಸಿ ನಡೆಸಿದಾಗ ₹ 3.80 ಲಕ್ಷ ಲಂಚ ಕೊಟ್ಟರೆ ವಿದ್ಯುತ್ ಸಂಪರ್ಕ ಕಲ್ಪಿಸುವುದಾಗಿ ಹೇಳಿದ್ದರು.
ಈ ಕುರಿತು ಅರ್ಜಿದಾರರು ಲೋಕಾಯುಕ್ತ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ–1ಕ್ಕೆ ದೂರು ಸಲ್ಲಿಸಿದ್ದರು. ಆರೋಪಿಯ ಸೂಚನೆಯಂತೆ ಚಂದನ್ ಕುಮಾರ್ ಅವರು ಸೋಮವಾರ ಸಹಾಯಕ ಎಂಜಿನಿಯರ್ ಅವರನ್ನು ಭೇಟಿಮಾಡಿ ₹ 3.80 ಲಕ್ಷ ಲಂಚದ ಹಣ ತಲುಪಿಸಿದರು. ತಕ್ಷಣ ದಾಳಿಮಾಡಿದ ಲೋಕಾಯುಕ್ತ ಪೊಲೀಸ್ ವಿಭಾಗದ ಡಿವೈಎಸ್ಪಿ ಗಿರೀಶ್ ರೋಡ್ಕರ್ ಮತ್ತು ತಂಡ ಆರೋಪಿಯನ್ನು ಬಂಧಿಸಿದೆ ಎಂದು ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಲೋಕಾಯುಕ್ತದ ಪೊಲೀಸ್ ವಿಭಾಗದ ಬೆಂಗಳೂರು ನಗರ ಘಟಕ–1ರ ಎಸ್ಪಿ ಶ್ರೀನಾಥ್ ಜೋಶಿ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.