ಬೆಂಗಳೂರು: ಹೊರಮಾವು ಅಗರ ಕೆರೆ ಮುಖ್ಯರಸ್ತೆಯಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದ್ದು, ಸವಾರ ಹೊನ್ನಪ್ಪ ಪೂಜಾರಿ (26) ಎಂಬುವರು ಮೃತಪಟ್ಟಿದ್ದಾರೆ.
‘ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಹದನೂರಿನ ಹೊನ್ನಪ್ಪ, ಕೆಲ ವರ್ಷಗಳ ಹಿಂದೆಯಷ್ಟೇ ಕೆಲಸ ಹುಡುಕಿಕೊಂಡು ನಗರಕ್ಕೆ ಬಂದಿದ್ದರು. ಟ್ರ್ಯಾಕ್ಟರ್ ಚಾಲಕ ಹಾಗೂ ಕೂಲಿ ಕಾರ್ಮಿಕರಾಗಿ ಕೆಲಸ ಆರಂಭಿಸಿದ್ದರು’ ಎಂದು ಬಾಣಸವಾಡಿ ಸಂಚಾರ ಪೊಲೀಸರು ಹೇಳಿದರು.
‘ಹೊನ್ನಪ್ಪ ಅವರು ಭಾನುವಾರ ರಾತ್ರಿ ಅಗರ ಕಡೆಯಿಂದ ಜಯಂತಿ ಗ್ರಾಮದ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೊರಟಿದ್ದರು. ಅಡುಗೆ ಅನಿಲ ಸಿಲಿಂಡರ್ ಸಾಗಿಸುತ್ತಿದ್ದ ಲಾರಿಯೊಂದು ಅದೇ ಮಾರ್ಗದಲ್ಲಿ ನಿಂತಿತ್ತು. ಅದನ್ನು ಹೊನ್ನಪ್ಪ ಗಮನಿಸಿರಲಿಲ್ಲ. ವೇಗವಾಗಿ ಹೊರಟಿದ್ದ ಬೈಕ್, ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿತ್ತು’ ಎಂದು ತಿಳಿಸಿದರು.
‘ತೀವ್ರ ಗಾಯಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದ ಹೊನ್ನಪ್ಪ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಅವರು ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದರು’ ಎಂದು ಪೊಲೀಸರು ಹೇಳಿದರು.
ಲಾರಿ ಚಾಲಕನ ವಿರುದ್ಧ ಪ್ರಕರಣ: ‘ಚಾಲಕ, ಯಾವುದೇ ಸಂಚಾರ ನಿಯಮ ಪಾಲಿಸದೇ ನಿರ್ಲಕ್ಷ್ಯದಿಂದ ರಸ್ತೆಯಲ್ಲಿ ಲಾರಿ ನಿಲ್ಲಿಸಿದ್ದ. ಅಪಘಾತಕ್ಕೆ ಕಾರಣವಾದ ಆರೋಪದಡಿ ಚಾಲಕನ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಲಾರಿ ಜಪ್ತಿ ಮಾಡಲಾಗಿದೆ’ ಎಂದು ಪೊಲೀಸರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.