ADVERTISEMENT

ಮಡಿವಾಳ ಠಾಣೆ ಇನ್‌ಸ್ಪೆಕ್ಟರ್‌ ಅಮಾನತು

​ಪ್ರಜಾವಾಣಿ ವಾರ್ತೆ
Published 4 ಜನವರಿ 2022, 6:35 IST
Last Updated 4 ಜನವರಿ 2022, 6:35 IST

ಬೆಂಗಳೂರು: ಆರೋಪಿಯಿಂದ ಲಂಚ ಪಡೆದ ಆರೋಪ ಎದುರಿಸುತ್ತಿರುವ ಮಡಿವಾಳ ಠಾಣೆ ಇನ್‌ಸ್ಪೆಕ್ಟರ್‌ ಸುನೀಲ್‌ ನಾಯಕ್‌ ಅವರನ್ನು ನಗರ ಪೊಲೀಸ್‌ ಕಮಿಷನರ್‌ ಕಮಲ್‌ ಪಂತ್‌ ಅಮಾನತು ಮಾಡಿದ್ದಾರೆ.

‘ವರದಕ್ಷಿಣೆ ಕಿರುಕುಳ ಸಂಬಂಧ ಮುಂಬೈ ಮೂಲದ ಅಜಯ್‌ ವಿರುದ್ಧ ಮಡಿವಾಳ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ನಡೆಸಿದ್ದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆಗೆ ಪದೇ ಪದೇ ಗೈರಾಗಿದ್ದರಿಂದ ಅಜಯ್‌ ವಿರುದ್ಧ ವಾರಂಟ್‌ ಜಾರಿಗೊಳಿಸಲಾಗಿತ್ತು. ಮುಂಬೈಗೆ ಹೋಗಿ ಆರೋಪಿಯನ್ನು ಬಂಧಿಸಿದ್ದ ಪೊಲೀಸರು, ನಗರಕ್ಕೆ ಬಂದ ಮೇಲೆ ಹಣ ಪಡೆದು ಆತನನ್ನು ಬಿಟ್ಟು ಕಳುಹಿಸಿದ್ದರು’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ಸಿಬ್ಬಂದಿಗೆ ಲಂಚ ನೀಡುತ್ತಿರುವ ದೃಶ್ಯವನ್ನು ಮೊಬೈಲ್‌ನಲ್ಲಿ ಸೆರೆಹಿಡಿದುಕೊಂಡಿದ್ದ ಆರೋ‍ಪಿ ಅದನ್ನು ಕಮಿಷನರ್‌ ಸೇರಿದಂತೆ ಇತರ ಅಧಿಕಾರಿಗಳಿಗೆ ಕಳುಹಿಸಿದ್ದ. ಡಿಸಿ‍ಪಿ ಶ್ರೀನಾಥ್ ಜೋಶಿ ಸಲ್ಲಿಸಿದ್ದ ತನಿಖಾ ವರದಿ ಆಧಾರದಲ್ಲಿ ಸುನೀಲ್‌ ಅವರನ್ನು ಅಮಾನತು ಮಾಡಲಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.