ಮಹಾಲಕ್ಷ್ಮಿ
ಬೆಂಗಳೂರು: ವೈಯಾಲಿಕಾವಲ್ನಲ್ಲಿ ನಡೆದಿದ್ದ ಮಹಾಲಕ್ಷ್ಮಿ (29) ಅವರ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು, ಆರೋಪಿಗಾಗಿ ಒಡಿಶಾ, ಜಾರ್ಖಂಡ್ ಹಾಗೂ ಪಶ್ಚಿಮ ಬಂಗಾಳ ರಾಜ್ಯದ ಗಡಿಪ್ರದೇಶಗಳಲ್ಲಿ ಶೋಧ ನಡೆಸಿದ್ದಾರೆ.
‘ಕೃತ್ಯ ಎಸಗಿದ ಬಳಿಕ ಆರೋಪಿ ಹೊರರಾಜ್ಯಕ್ಕೆ ಪರಾರಿಯಾಗಿರುವ ಮಾಹಿತಿ ಕೇಂದ್ರ ವಿಭಾಗದ ಪೊಲೀಸರಿಗೆ ಸಿಕ್ಕಿದ್ದು, ಅದನ್ನು ಆಧರಿಸಿ ತನಿಖೆ ಚುರುಕುಗೊಳಿಸಿದ್ದಾರೆ’ ಎಂದು ಮೂಲಗಳು ಖಚಿತ ಪಡಿಸಿವೆ.
‘ಆರೋಪಿ, ಮಹಾಲಕ್ಷ್ಮಿ ಅವರ ದೇಹವನ್ನು 52 ತುಂಡುಗಳಾಗಿ ಕತ್ತರಿಸಿ ಫ್ರಿಜ್ನಲ್ಲಿ ಇರಿಸಿದ್ದ. ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ವೈದ್ಯರು ಕೊಲೆಯಾದ ಮಹಿಳೆಯ ದೇಹದ ತುಂಡುಗಳನ್ನು ಜೋಡಿಸಿ ಎರಡು ತಾಸು ಮರಣೋತ್ತರ ಪರೀಕ್ಷೆ ನಡೆಸಿದ್ದರು. ಮರಣೋತ್ತರ ಪರೀಕ್ಷೆಯ ಪ್ರಾಥಮಿಕ ಮಾಹಿತಿಯನ್ನಷ್ಟೇ ವೈದ್ಯರು, ತನಿಖಾಧಿಕಾರಿಗಳಿಗೆ ನೀಡಿದ್ದಾರೆ. ಎರಡು ದಿನಗಳಲ್ಲಿ ಸಂಪೂರ್ಣ ವರದಿ ಸಿದ್ಧವಾಗಲಿದೆ’ ಎಂದು ಮೂಲಗಳು ತಿಳಿಸಿವೆ.
‘ಮಹಾಲಕ್ಷ್ಮಿಯ ಎದೆ ಮತ್ತು ಹೊಟ್ಟೆಯ ಭಾಗಕ್ಕೆ ಚುಚ್ಚಿರುವ ಆರೋಪಿ ಬಳಿಕ ಮೃತದೇಹವನ್ನು ತುಂಡರಿಸಿದ್ದಾನೆ. ನಂತರ, ಫ್ರಿಜ್ನಲ್ಲಿ ಇರಿಸಿದ್ದಾನೆ. ಕೊಲೆಗೂ ಮುನ್ನ ಆಕೆಯ ಪ್ರಜ್ಞೆ ತಪ್ಪಿಸಲಾಗಿತ್ತೆ? ಅಥವಾ ವಿಷಪ್ರಾಶನ ಮಾಡಿ ಕೊಲೆ ಮಾಡಲಾಗಿತ್ತೆ ಎಂಬುದನ್ನು ಪತ್ತೆ ಹಚ್ಚಲು ಹೊಟ್ಟೆ ಹಾಗೂ ಕರುಳಿನ ಭಾಗವನ್ನು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ(ಎಫ್ಎಸ್ಎಲ್) ರವಾನಿಸಲಾಗಿದೆ. ಎಫ್ಎಸ್ಎಲ್ ವರದಿ ಬರುವುದು ವಿಳಂಬವಾಗುತ್ತಿದೆ’ ಎಂದು ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.