ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ
ಚಿತ್ರಕೃಪೆ: ಎಕ್ಸ್
ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ 2ನೇ ಮತ್ತು 3ನೇ ಘಟಿಕೋತ್ಸವ ಅಕ್ಟೋಬರ್ 3ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಟಿ.ಎಂ. ಮಂಜುನಾಥ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ನಟಿ ಭಾರತಿ ವಿಷ್ಣುವರ್ಧನ್, ಹೋಮಿಯೋಪಥಿ ವೈದ್ಯ ಡಾ. ಬಿ.ಟಿ. ರುದ್ರೇಶ್, ಶಿಕ್ಷಣ ತಜ್ಞೆ ಎಚ್.ಎನ್. ಉಷಾ, ಬಯೋಕಾನ್ ಸಂಸ್ಥಾಪಕಿ ಕಿರಣ್ ಮಜುಂದಾರ್ ಷಾ, ಮಾನವ ಹಕ್ಕುಗಳ ಹೋರಾಟಗಾರ್ತಿ ದು. ಸರಸ್ವತಿ, ಕ್ರಿಕೆಟ್ ಪಟು ವೇದಾ ಕೃಷ್ಣಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗುವುದು’ ಎಂದು ಮಾಹಿತಿ ನೀಡಿದರು.
2023–24ನೇ ಬ್ಯಾಚ್ಗೆ ಸಂಬಂಧಿಸಿದಂತೆ 1,346 ವಿದ್ಯಾರ್ಥಿಗಳು ಪದವಿ, 481 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪದವಿಯಲ್ಲಿ 28 ವಿದ್ಯಾರ್ಥಿಗಳು ರ್ಯಾಂಕ್, 6 ವಿದ್ಯಾರ್ಥಿಗಳು ಚಿನ್ನ ಮತ್ತು ಸ್ನಾತಕೋತ್ತರ ಪದವಿಯಲ್ಲಿ 23 ವಿದ್ಯಾರ್ಥಿಗಳು ರ್ಯಾಂಕ್, 18 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆದಿದ್ದು, ಘಟಿಕೋತ್ಸವದಲ್ಲಿ ಪ್ರದಾನ ಮಾಡಲಾಗುವುದು ಎಂದು ವಿವರಿಸಿದರು.
2024–25ನೇ ಬ್ಯಾಚ್ಗೆ ಸಂಬಂಧಿಸಿದಂತೆ 1,209 ವಿದ್ಯಾರ್ಥಿಗಳು ಪದವಿ, 537 ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಪದವಿಯಲ್ಲಿ 30 ವಿದ್ಯಾರ್ಥಿಗಳು ರ್ಯಾಂಕ್, 10 ವಿದ್ಯಾರ್ಥಿಗಳು ಚಿನ್ನ ಮತ್ತು ಸ್ನಾತಕೋತ್ತರ ಪದವಿಯಲ್ಲಿ 26 ವಿದ್ಯಾರ್ಥಿಗಳು ರ್ಯಾಂಕ್, 18 ವಿದ್ಯಾರ್ಥಿಗಳು ಚಿನ್ನದ ಪದಕ ಪಡೆಯಲು ಅರ್ಹರಾಗಿದ್ದಾರೆ ಎಂದರು.
ರಾಜ್ಯಪಾಲ ಥಾವರಚಂದ್ ಗೆಹಲೋತ್ ಅಧ್ಯಕ್ಷತೆ ವಹಿಸಲಿದ್ದಾರೆ. ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್ ಭಾಗವಹಿಸಲಿದ್ದಾರೆ. ಮಾಜಿ ಕುಲಪತಿ ಸಬಿಹಾ ಭೂಮಿಗೌಡ ಘಟಿಕೋತ್ಸವ ಭಾಷಣ ನೀಡಲಿದ್ದಾರೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಕುಲಸಚಿವ (ಮೌಲ್ಯಮಾಪನ) ಎಸ್. ಸತೀಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.