ADVERTISEMENT

ಹಿಂದಿನ ಸೆಮಿಸ್ಟರ್‌ ಪರೀಕ್ಷೆ ರದ್ದು ಮಾಡಿ: ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಹಾರಾಣಿ ಕ್ಲಸ್ಟರ್ ವಿವಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2021, 19:59 IST
Last Updated 14 ಜುಲೈ 2021, 19:59 IST
ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ
ಪರೀಕ್ಷೆ ರದ್ದುಗೊಳಿಸಲು ಆಗ್ರಹಿಸಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಾಲೇಜಿನ ಎದುರು ಪ್ರತಿಭಟನೆ ನಡೆಸಿದರು -ಪ್ರಜಾವಾಣಿ ಚಿತ್ರ   

ಬೆಂಗಳೂರು: ಜುಲೈ 19ಕ್ಕೆ ನಿಗದಿಯಾಗಿರುವ ಪದವಿ ಮತ್ತು ಸ್ನಾತಕೋತ್ತರ ಪದವಿಗಳ ಹಿಂದಿನ ಸೆಮಿಸ್ಟರ್‌ಗಳ ಪರೀಕ್ಷೆಗಳನ್ನು ರದ್ದು ಮಾಡಬೇಕು ಎಂದು ಆಗ್ರಹಿಸಿ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಾಲೇಜಿನ ಎದುರು ಬುಧವಾರ ಪ್ರತಿಭಟನೆ ನಡೆಸಿದರು.

ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಹಾಗೂ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹೋರಾಟ ಸಮಿತಿಗಳು ಜಂಟಿಯಾಗಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ 50ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು.

‘ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಯನ್ನು ತರಾತುರಿಯಲ್ಲಿ ಜುಲೈ 19ಕ್ಕೆ ನಿಗದಿಪಡಿಸಿ, ವಿಶ್ವವಿದ್ಯಾಲಯ ವೇಳಾಪಟ್ಟಿ ಸಹಿತ ಸುತ್ತೋಲೆ ಹೊರಡಿಸಿದೆ. ಒಂದೇ ತಿಂಗಳಿನಲ್ಲಿ ಎರಡು ಸೆಮಿಸ್ಟರ್‌ ಪರೀಕ್ಷೆ ನಡೆಸುವುದು ಖಂಡನೀಯ. ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಗಳನ್ನು ನಡೆಸಬಾರದು ಹಾಗೂ ಸುತ್ತೋಲೆಯನ್ನು ಕೂಡಲೇ ಹಿಂಪಡೆಯಬೇಕು’ ಎಂದುಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಹೋರಾಟ ಸಮಿತಿ ಸದಸ್ಯೆಗುಣಶೀಲ ಆಗ್ರಹಿಸಿದರು.

ADVERTISEMENT

‘ಪ್ರತಿಭಟನೆ ವೇಳೆ ವಿಶ್ವವಿದ್ಯಾಲಯದ ಕುಲಪತಿ ಎಲ್.ಗೋಮತಿ ದೇವಿ ಸ್ಥಳಕ್ಕೆ ಭೇಟಿ ನೀಡಿ, ನಮ್ಮ ಬೇಡಿಕೆಗಳನ್ನು ಆಲಿಸಿದರು. ಇದೇ 19ರಿಂದ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಪರೀಕ್ಷೆ ನಿಗದಿಗೂ ಮುನ್ನ ವಿದ್ಯಾರ್ಥಿಗಳ ಗಮನಕ್ಕೆ ತರುವುದಾಗಿಯೂ ಹೇಳಿದ್ದಾರೆ’ ಎಂದು ಸಮಿತಿ ಸದಸ್ಯೆಸಂಗೀತಾ ತಿಳಿಸಿದರು.

ಎಐಡಿಎಸ್‌ಒ ಬೆಂಗಳೂರು ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಸಿ.ಎಂ.ಅಪೂರ್ವ, ‘ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಗಳು ರದ್ದಾಗಬೇಕು ಎನ್ನುವುದು ವಿದ್ಯಾರ್ಥಿಗಳ ಬೇಡಿಕೆ. ನಿಗದಿಯಾಗಿದ್ದ ಪರೀಕ್ಷೆಗಳನ್ನುಸದ್ಯಕ್ಕೆ ಮುಂದೂಡಲಾಗಿದೆ. ಹಿಂದಿನ ಸೆಮಿಸ್ಟರ್‌ನ ಪರೀಕ್ಷೆಗಳು ರದ್ದಾಗುವವರೆಗೂ ಹೋರಾಟ ಮುಂದುವರಿಯಲಿದೆ. ಎಲ್ಲ ವಿದ್ಯಾರ್ಥಿಗಳಿಗೆ ಕೋವಿಡ್‌ನ ಎರಡೂ ಲಸಿಕೆ ನೀಡಿದ ನಂತರ ತರಗತಿಗಳನ್ನು ಆರಂಭಿಸಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.