ಬೆಂಗಳೂರು: ಪರಿಶಿಷ್ಟರ ಪ್ರಗತಿಗೆ ಶ್ರಮಿಸುತ್ತಿರುವ ಸಾಹಿತಿ ಡಾ.ಕಮಲಾ ಹಂಪನಾ, ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಓಬಳಪ್ಪ ಹಾಗೂ ವೈದ್ಯ ಜಿ.ರಂಗಯ್ಯ ಅವರನ್ನು ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಸರ್ಕಾರ ಆಯ್ಕೆ ಮಾಡಿದೆ.
ಪ್ರಶಸ್ತಿಯು ತಲಾ ₹5 ಲಕ್ಷ ನಗದು ಹಾಗೂ 20 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿದೆ. ಪ್ರಶಸ್ತಿಗೆ ಆಯ್ಕೆ ಮಾಡಲು ವಿಶ್ರಾಂತ ಕುಲಪತಿ ಡಾ.ಎಸ್.ಆರ್.ನಿರಂಜನ್ ನೇತೃತ್ವದಲ್ಲಿ ಮೂವರ ಸಮಿತಿ ರಚಿಸಲಾಗಿತ್ತು. ಈ ಸಮಿತಿ ನೀಡಿದ ವರದಿಯನ್ನು ಅಂಗೀಕರಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು ಸುದ್ದಿಗೋಷ್ಠಿಯಲ್ಲಿ ಶುಕ್ರವಾರ ತಿಳಿಸಿದರು.
ವಾಲ್ಮೀಕಿ ಜಯಂತಿ ಕಾರ್ಯಕ್ರಮ ಅ. 13ರಂದು ವಿಧಾನಸೌಧ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆಯಲಿದ್ದು, ಈ ಸಂದರ್ಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದರು.
ಕಮಲಾ ಹಂಪನಾ ಅವರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ. ನಿವೃತ್ತ ಕೃಷಿ ಅಧಿಕಾರಿಯಾಗಿರುವ ಓಬಳಪ್ಪ ಅವರು ಮಹರ್ಷಿ ವಾಲ್ಮೀಕಿ ಗುರುಪೀಠದ ಆಡಳಿತಾಧಿಕಾರಿಯಾಗಿದ್ದು, ಹರಿಹರ ವಾಲ್ಮೀಕಿ ಹಾಸ್ಟೆಲ್ ಸಮಿತಿ ಅಧ್ಯಕ್ಷರಾಗಿದ್ದಾರೆ. ವಾಲ್ಮೀಕಿ ಸಮಾಜದ ಮಕ್ಕಳಿಗೆ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಶ್ರಮಿಸುತ್ತಿದ್ದಾರೆ.
ನರರೋಗ ತಜ್ಞರಾಗಿರುವ ಜಿ.ರಂಗಯ್ಯ ಅವರು ನ್ಯೂಯಾರ್ಕ್ ಸಿಟಿ ಮೆಡಿಕಲ್ ಸೊಸೈಟಿ ಅಧ್ಯಕ್ಷರಾಗಿ, ಇಂಡಿಯನ್ ನ್ಯೂರಾಲಜಿಸ್ಟ್ ನ್ಯಾಷನಲ್ ಅಸೋಸಿಯೇಷನ್ ಅಧ್ಯಕ್ಷರಾಗಿ ಕೆಲಸ ನಿರ್ವಹಿಸುತ್ತಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.