ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ರಾಜ್ಯಸಭೆ ಚುನಾವಣೆಗೆ ಅಭ್ಯರ್ಥಿಯಾಗಿರುವ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಪುತ್ರ, ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಜೀವಬೆದರಿಕೆ ಹಾಕಲಾಗಿದೆ. ಈ ಕುರಿತು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಪ್ರಿಯಾಂಕ್ ಖರ್ಗೆ ದೂರು ನೀಡಿದ್ದಾರೆ.
'ಸದಾಶಿವ ನಗರದಲ್ಲಿರುವ ಮನೆಯ ದೂರವಾಣಿಗೆ ಜೂನ್ 7ರ ಮಧ್ಯರಾತ್ರಿ 1.30ರ ಸುಮಾರಿಗೆ ಕರೆ ಮಾಡಿದ ವ್ಯಕ್ತಿ, ತಂದೆಯವರು ಕರೆ ಸ್ವೀಕರಿಸುತ್ತಿದ್ದಂತೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಅಲ್ಲದೆ, ಅದೇ ದಿನ ರಾತ್ರಿ 12.36ರಿಂದ 12.53ರ ಮಧ್ಯೆ ನನಗೂ ಅಪರಿಚಿತ ಸಂಖ್ಯೆಯಿಂದ ಕರೆ ಬಂದಿದ್ದು, ಕರೆ ಸ್ವೀಕರಿಸಲಿಲ್ಲ. ರಾತ್ರಿ 1 ಗಂಟೆಗೆ ಮತ್ತೆ ಕರೆ ಮಾಡಿದ್ದ ವ್ಯಕ್ತಿ, ನನ್ನನ್ನೂ ಅವಾಚ್ಯವಾಗಿ ನಿಂದಿಸಿ ಜೀವಬೆದರಿಕೆ ಒಡ್ಡಿದ್ದಾನೆ’ ಎಂದು ದೂರಿನಲ್ಲಿ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಕರೆ ಬಂದಿರುವ ಮೊಬೈಲ್ ಸಂಖ್ಯೆಯ ಸ್ಕ್ರೀನ್ ಶಾಟ್ ಕೂಡಾ ನೀಡಿರುವ ಖರ್ಗೆ, ಕರೆ ಮಾಡಿರುವ ವ್ಯಕ್ತಿಯನ್ನು ಪತ್ತೆ ಹಚ್ಚಿ ಕಾನೂನು ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.