ಬೆಂಗಳೂರು: ಕೊಲೆ ಪ್ರಕರಣದ ವಿಚಾರಣೆಗೆಂದು ನಗರದ ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಹಾಜರಾಗಿದ್ದ ಆರೋಪಿ ಜಿತಿನ್ (37) 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
‘ಮಕ್ಕಳಿಬ್ಬರನ್ನು ಕೊಲೆ ಮಾಡಿದ ಆರೋಪದ ಮೇಲೆ ಜಿತಿನ್ನನ್ನು ಹುಳಿಮಾವು ಪೊಲೀಸರು ಎರಡು ವರ್ಷದ ಹಿಂದೆ ಬಂಧಿಸಿದ್ದರು. ಬಳಿಕ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕಳುಹಿಸಿದ್ದರು. ಪ್ರಕರಣದ ವಿಚಾರಣೆಗಾಗಿ ಆತನನ್ನು ಬುಧವಾರ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಮಧ್ಯಾಹ್ನ 3 ಗಂಟೆ ಸುಮಾರಿಗೆ ಭದ್ರತೆಯಲ್ಲಿದ್ದ ಸಿಬ್ಬಂದಿಯನ್ನು ತಳ್ಳಿ ಆತ 5ನೇ ಮಹಡಿಯಿಂದ ಕೆಳಕ್ಕೆ ಹಾರಿದ್ದ. ಗಂಭೀರವಾಗಿ ಗಾಯಗೊಂಡಿದ್ದರಿಂದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಸಂಜೆ ಮೃತಪಟ್ಟಿದ್ದಾನೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಅಕ್ಷಯನಗರದ ಹನಿಡೀವ್ ವಸತಿ ಸಮುಚ್ಚಯದಲ್ಲಿ ಪತ್ನಿಯೊಂದಿಗೆ ವಾಸವಿದ್ದಆರೋಪಿ ಜಿತಿನ್, 2020ರ ಮಾರ್ಚ್ 20ರಂದು ಮಕ್ಕಳಾದ ತೌಶಿಣಿ (5) ಹಾಗೂ ಶಾಸ್ತ (2) ಅವರನ್ನು ಕೊಲೆ ಮಾಡಿದ್ದ. ಈ ಸಂಬಂಧ ಆತನ ಪತ್ನಿ ಮಾರ್ಚ್ 21ರಂದು ದೂರು ದಾಖಲಿಸಿದ್ದರು. ಅದರ ಆಧಾರದಲ್ಲಿ ಪ್ರಕರಣ ದಾಖಲಿಸಿದ್ದ ಹುಳಿಮಾವು ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.
ಜೈಲಿನಿಂದಲೇ ತನಗೆ ಆಗಾಗ ಕರೆಮಾಡುತ್ತಿದ್ದ ಜಿತಿನ್, ಕೊಲೆ ಬೆದರಿಕೆ ಹಾಕುತ್ತಿದ್ದ ಎಂದೂ ಪತ್ನಿ ಆರೋಪಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.