ಬೆಂಗಳೂರು: ಕೊಡಿಗೇಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದ ಅಪಾರ್ಟ್ಮೆಂಟ್ ಸಮುಚ್ಚಯವೊಂದರ 10ನೇ ಮಹಡಿಯಿಂದ ಬಿದ್ದು ಕಾರ್ಪೆಂಟರ್ ಬಿಸ್ವಜಿತ್ ಸಹಾ (31) ಎಂಬುವವರು ಮೃತಪಟ್ಟಿದ್ದಾರೆ.
‘ಪಶ್ಚಿಮ ಬಂಗಾಳದ ಬಿಸ್ವಜಿತ್, ಕೆಲ ತಿಂಗಳ ಹಿಂದೆಯಷ್ಟೇ ನಗರಕ್ಕೆ ಬಂದಿದ್ದರು. ರಾಜೀವ್ ಗಾಂಧಿ ನಗರದ ಕೆನರಾ ಬ್ಯಾಂಕ್ ಬಡಾವಣೆಯಲ್ಲಿ ನಿರ್ಮಿಸುತ್ತಿರುವ ‘ಸುಹಾನ್ ಎಕ್ಸೊಟಿಕಾ’ ಅಪಾರ್ಟ್ಮೆಂಟ್ ಸಮುಚ್ಚಯದ ಕಟ್ಟಡದಲ್ಲಿ ಕೆಲಸ ಮಾಡುತ್ತಿದ್ದರು’ ಎಂದು ಪೊಲೀಸರು ಹೇಳಿದರು.
‘ಜ. 21ರಂದು ಬೆಳಿಗ್ಗೆ ಕೆಲಸಕ್ಕೆ ಬಂದಿದ್ದ ಬಿಸ್ವಜಿತ್, 10ನೇ ಮಹಡಿಯಲ್ಲಿ ಕೆಲಸ ಮಾಡುತ್ತಿದ್ದರು. ಇದೇ ಸಂದರ್ಭದಲ್ಲಿ ಆಯತಪ್ಪಿ ನೆಲಮಹಡಿಗೆ ಬಿದ್ದಿದ್ದರು. ತೀವ್ರ ಗಾಯಗೊಂಡಿದ್ದ ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ತಪಾಸಣೆ ನಡೆಸಿದ್ದ ವೈದ್ಯರು, ಮಾರ್ಗಮಧ್ಯೆಯೇ ಬಿಸ್ವಜಿತ್ ಮೃತಪಟ್ಟಿರುವುದಾಗಿ ಹೇಳಿದರು’ ಎಂದು ಪೊಲೀಸರು ಮಾಹಿತಿ ನೀಡಿದರು.
‘ಕೆಲಸದ ಸ್ಥಳದಲ್ಲಿ ಯಾವುದೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿರಲಿಲ್ಲ. ಇದರಿಂದಾಗಿಯೇ ಬಿಸ್ವಜಿತ್ ಮೃತಪಟ್ಟಿರುವುದಾಗಿ ಸಹ ಕಾರ್ಮಿಕ ದೂರು ನೀಡಿದ್ದಾರೆ. ಕಟ್ಟಡ ನಿರ್ಮಾಣದ ಗುತ್ತಿಗೆ ಪಡೆದಿದ್ದ ಫಾರ್ಚ್ಯೂನಾ ಅರ್ಬನ್ ಸ್ಕ್ಯಾಪ್ ಕಂಪನಿ, ಉಪ ಗುತ್ತಿಗೆ ಪಡೆದಿದ್ದ ಎಎನ್ಎಸ್ ಎಂಟರ್ಪ್ರೈಸಸ್ ಹಾಗೂ ಮಾರ್ವೆಲ್ ಕನ್ಸ್ಟ್ರಕ್ಷನ್ ವಿರುದ್ಧ ಎಫ್ಐಆರ್ ದಾಖಲಿಸಿಕೊಳ್ಳಲಾಗಿದೆ’ ಎಂದು ಪೊಲೀಸರು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.