ADVERTISEMENT

ಚಂದಾಪುರ ಕೆರೆ ಪ್ರದೇಶದ ಮ್ಯಾಪಿಂಗ್‌

ಎನ್‌ಜಿಟಿಗೆ ಕರ್ನಾಟಕ ಸರ್ಕಾರ ಮುಖ್ಯ ಕಾರ್ಯದರ್ಶಿ ಪ್ರಮಾಣಪತ್ರ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2022, 19:33 IST
Last Updated 11 ಅಕ್ಟೋಬರ್ 2022, 19:33 IST

ನವದೆಹಲಿ: ಬೆಂಗಳೂರಿನ ಚಂದಾಪುರ ಕೆರೆಯ ಜಲಾನಯನ ಪ್ರದೇಶದ ಮ್ಯಾಪಿಂಗ್‌ ನಡೆಸಲು ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಗೆ (ಎನ್‌ಜಿಟಿ) ತಿಳಿಸಿದ್ದಾರೆ.

ಚಂದಾಪುರ ಕೆರೆಯ ಮಾಲಿನ್ಯದ ಬಗ್ಗೆ ಎನ್‌ಜಿಟಿ ವಿಚಾರಣೆ ನಡೆಸುತ್ತಿದ್ದು, ಕೊಳಚೆ ನೀರು ಜಲಕಾಯಕ್ಕೆ ಸೇರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ರಾಜ್ಯ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಮುಖ್ಯ ಕಾರ್ಯದರ್ಶಿ ಅವರು ಎನ್‌ಜಿಟಿಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ಜಲಾನಯನ ಪ್ರದೇಶದ ನಕ್ಷೆ ಹಾಗೂ ನೈಸರ್ಗಿಕ ಚರಂಡಿಗಳ ಹರಿವಿನ ವಿವರಗಳನ್ನು ಕರ್ನಾಟಕ ರಾಜ್ಯ ದೂರಸಂವೇದಿ ಆನ್ವಯಿಕ ಕೇಂದ್ರದಿಂದ ಪಡೆಯಲಾಗಿದೆ. ಭೂಮಾಪನಾ ಇಲಾಖೆಯ ಉಪ ನಿರ್ದೇಶಕರು ಜಲಾನ ಯನ ಪ್ರದೇಶದ ಟೋಟಲ್‌ ಸ್ಟೇಷನ್ ಸರ್ವೆ ನಡೆಸುತ್ತಿ
ದ್ದಾರೆ. ಎನ್‌ಜಿಟಿ ನಿರ್ದೇ ಶನದ ಪ್ರಕಾರ, ಮ್ಯಾಪಿಂಗ್‌ ಪ್ರಕ್ರಿಯೆ ಈ ತಿಂಗಳ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ADVERTISEMENT

‌ಚಂದಾಪುರ ಕೆರೆಗೆ ಕೊಳಚೆ ನೀರು ಸೇರದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಕರ್ನಾಟಕ ನಗರ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಗೆ ಸೂಚಿಸಲಾಗಿದೆ.

ಕೆರೆಯಲ್ಲಿ ಮಾಲಿನ್ಯ ಪ್ರಮಾಣ ತಗ್ಗಿಸಲು ಕಡಿಮೆ ವೆಚ್ಚದ ಯೋಜನಾ ಮಾದರಿಯ ವರದಿ ನೀಡುವಂತೆ ಭಾರತೀಯ ವಿಜ್ಞಾನ ಸಂಸ್ಥೆಯ ವಿಜ್ಞಾನಿಗಳಲ್ಲಿ ಕೋರಲಾಗಿದೆ ಎಂದು ಅವರು ಹೇಳಿದ್ದಾರೆ.

ಜಲಾನಯನ ಪ್ರದೇಶದಲ್ಲಿರುವ ಕೈಗಾರಿಕೆಗಳ ಪರಿಸರ ಲೆಕ್ಕಪರಿಶೋಧನೆ ನಡೆಸಲು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ಸೂಚಿಸಲಾಗಿದೆ. ಬೆಂಗಳೂರಿನ ಆರ್‌.ವಿ. ಎಂಜಿನಿಯರಿಂಗ್‌ ಕಾಲೇಜಿಗೆ ಈ ಹೊಣೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.

ಆನೇಕಲ್‌ ತಾಲ್ಲೂಕಿನ 69 ಕೆರೆಗಳನ್ನು ತುಂಬಿಸಲು ಸಣ್ಣ ನೀರಾವರಿ ಇಲಾಖೆಯು ಏತ ನೀರಾವರಿ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ಈ ವರ್ಷದ ಏಪ್ರಿಲ್‌ನಲ್ಲಿ ಚಾಲನೆ ನೀಡಲಾಗಿದೆ ಎಂದು ಅವರು ಹೇಳಿದ್ದಾರೆ.

ಚಂದಾಪುರ ಕೆರೆಯ ಜಲಾನಯನ ಪ್ರದೇಶದ ಎಲ್ಲ ಕೆರೆಗಳ ಪುನರುಜ್ಜೀವನಕ್ಕೆ ವಿಸ್ತ್ರತ ಯೋಜನಾ ವರದಿ ಸಿದ್ಧಪಡಿಸಲಾಗುತ್ತಿದೆ.ಈ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಹೆಬ್ಬಗೋಡೆ ನಗರಸಭೆಯಲ್ಲಿ ₹153 ಕೋಟಿ ವೆಚ್ಚದಲ್ಲಿ ಹಾಗೂ ಬೊಮ್ಮಸಂದ್ರ ಪುರಸಭೆಯಲ್ಲಿ ₹109 ಕೋಟಿ ವೆಚ್ಚದಲ್ಲಿ ಭೂಗತ ಒಳಚರಂಡಿ ವ್ಯವಸ್ಥೆ ರೂಪಿಸಲು ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ. ನಾಲ್ಕು ಸ್ಥಳೀಯ ಸಂಸ್ಥೆಗಳಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕಗಳನ್ನು ಸ್ಥಾಪಿಸಲು ಜಾಗ ಒದಗಿಸಲಾಗಿದೆ ಎಂದು ಅವರು ಪ್ರಮಾಣಪತ್ರದಲ್ಲಿ ತಿಳಿಸಿದ್ದಾರೆ.

ಚಂದಾಪುರ ಕೆರೆಯ ಜಲಾನಯನ ಪ್ರದೇಶದಲ್ಲಿರುವ 17 ಕೈಗಾರಿಕೆಗಳನ್ನು ಮುಚ್ಚಲು ಮಾಲಿನ್ಯ ನಿಯಂತ್ರಣ ಮಂಡಳಿ ನಿರ್ದೇಶನ ನೀಡಿದೆ ಎಂದೂ ಅವರು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.