ADVERTISEMENT

ಅಂಕ ತಿದ್ದಿದ ಹಗರಣ: ತನಿಖೆಗೆ ದೊರೆಸ್ವಾಮಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 6 ಜನವರಿ 2021, 19:46 IST
Last Updated 6 ಜನವರಿ 2021, 19:46 IST
ಡಾ. ಎಂ.ಆರ್. ದೊರೆಸ್ವಾಮಿ
ಡಾ. ಎಂ.ಆರ್. ದೊರೆಸ್ವಾಮಿ   

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ 804 ಉತ್ತರ ಪತ್ರಿಕೆಗಳ ಅಂಕಗಳನ್ನು ತಿದ್ದಿರುವ ಹಗರಣವನ್ನು ಖಂಡಿಸಿರುವ ಸರ್ಕಾರದ ಶೈಕ್ಷಣಿಕ ಸಲಹೆಗಾರ ಡಾ. ಎಂ.ಆರ್. ದೊರೆಸ್ವಾಮಿ, ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದ್ದಾರೆ.

‘ಪ್ರಜಾವಾಣಿ'ಯಲ್ಲಿ ಜ.5ರಂದು ‘804 ಉತ್ತರಪತ್ರಿಕೆಗಳ ಅಂಕ ತಿದ್ದಿದರು’ ಶೀರ್ಷಿಕೆಯಡಿ ಪ್ರಕಟವಾದ ವರದಿ ನೋಡಿ ಪ್ರತಿಕ್ರಿಯಿಸಿರುವ ಅವರು, ‘ಶೈಕ್ಷಣಿಕ ಚಟುವಟಿಕೆಗಳನ್ನು ದಕ್ಷತೆಯಿಂದ, ಉತ್ತಮವಾಗಿ ವಿಶ್ವವಿದ್ಯಾಲಯಗಳು ನಿರ್ವಹಿಸಬೇಕು ಎಂದು ಸಮಾಜ ಬಯಸುತ್ತದೆ. ವಿಶ್ವವಿದ್ಯಾಲಯದಲ್ಲಿಯೇ ಇಂತಹ ಹಗರಣಗಳು ನಡೆಯುತ್ತಿವೆ. ಸ್ಕ್ಯಾನಿಂಗ್ ಏಜೆನ್ಸಿ, ವಿದ್ಯಾರ್ಥಿಗಳು, ವಿಶ್ವವಿದ್ಯಾಲಯದ ಸಿಬ್ಬಂದಿಯೇ ಈ ಅಕ್ರಮ ನಡೆಸಿರುವುದು ದುರದೃಷ್ಟಕರ’ ಎಂದು ಬೇಸರ ವ್ಯಕ್ತಪಡಿಸಿದರು.

‘ವಿಶ್ವವಿದ್ಯಾಲಯಗಳಲ್ಲಿನ ಪರೀಕ್ಷಾ ವ್ಯವಸ್ಥೆಯನ್ನೇ ಪುನರ್‌ ರೂಪಿಸಬೇಕಾದ ಅಗತ್ಯವನ್ನು ಈ ಹಗರಣ ಎತ್ತಿ ತೋರಿಸಿದೆ. ಹೊರಗುತ್ತಿಗೆ ಏಜೆನ್ಸಿಗಳು, ತಪ್ಪು ಮಾಡಿರುವ ವಿಶ್ವವಿದ್ಯಾಲಯದ ಸಿಬ್ಬಂದಿ ಹಾಗೂ ಮಧ್ಯವರ್ತಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು’ ಎಂದು ಅವರು ಆಗ್ರಹಿಸಿದ್ದಾರೆ.

ADVERTISEMENT

‘ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿಯವರ ನೇತೃತ್ವದಲ್ಲಿ ತನಿಖಾ ಸಮಿತಿಯನ್ನು ರಚಿಸಬೇಕು’ ಎಂದು ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.