ಪ್ರಾತಿನಿಧಿಕ ಚಿತ್ರ
ಬೆಂಗಳೂರು: ರಾಜ್ಯದಲ್ಲಿ ತಡೆಗಟ್ಟಬಹುದಾದ ತಾಯಂದಿರ ಮರಣ ಪ್ರಮಾಣವನ್ನು ಶೂನ್ಯಕ್ಕೆ ಇಳಿಸಲು ಆರೋಗ್ಯ ಇಲಾಖೆಯು ವಿಶೇಷ ಅಭಿಯಾನ ಹಮ್ಮಿಕೊಂಡಿದ್ದು, ಈ ಸಂಬಂಧ ತಾಯಿ ಮತ್ತು ಮಕ್ಕಳ ಆಸ್ಪತ್ರೆ (ಎಂಸಿಎಚ್) ಬಲವರ್ಧನೆ, ಉಪಕರಣಗಳ ಖರೀದಿ ಸೇರಿ ವಿವಿಧ ಕ್ರಮಗಳಿಗೆ ₹ 139 ಕೋಟಿ ಅನುದಾನ ಬಳಸಿಕೊಳ್ಳಲು ಅನುಮೋದನೆ ದೊರೆತಿದೆ.
ರಾಜ್ಯದಲ್ಲಿ ತಾಯಂದಿರ ಮರಣ ಪ್ರಮಾಣ ಇಳಿಮುಖವಾಗಿದೆ. 2024–25ನೇ ಸಾಲಿನಲ್ಲಿ ರಾಜ್ಯದಲ್ಲಿ 9.31 ಲಕ್ಷ ಹೆರಿಗೆಗಳಾಗಿದ್ದು, 530 ತಾಯಂದಿರ ಮರಣ ಪ್ರಕರಣ ವರದಿಯಾಗಿದೆ. ಈ ಸಾವಿನ ನಿಖರ ಕಾರಣ ತಿಳಿಯಲು ಸಾವಿನ ಲೆಕ್ಕಗಳ ವರದಿ (ಡೆತ್ ಆಡಿಟ್) ಸಿದ್ಧಪಡಿಸಲಾಗುತ್ತಿದೆ ಎಂದು ಇಲಾಖೆ ತಿಳಿಸಿದೆ.
ರಕ್ತಸ್ರಾವ, ಗರ್ಭಪಾತ, ಅಧಿಕ ರಕ್ತದೊತ್ತಡ ಸೇರಿ ವಿವಿಧ ಕಾರಣಗಳಿಂದ ತಾಯಂದಿರ ಮರಣ ವರದಿಯಾಗುತ್ತಿದ್ದು, ಶೇ 70 ರಷ್ಟು ಪ್ರಕರಣಗಳಲ್ಲಿ ಮರಣವನ್ನು ತಡೆಯಬಹುದಾಗಿದೆ. ಪ್ರಸವಪೂರ್ವ ಮತ್ತು ಪ್ರಸವ ನಂತರದ ಆರೈಕೆಯ ಗುಣಮಟ್ಟ ಸುಧಾರಿಸಲು ಕ್ರಮವಹಿಸಲಾಗಿದೆ ಎಂದು ಹೇಳಿದೆ.
ಗರ್ಭಿಣಿಯರಲ್ಲಿ ಮತ್ತು ಪ್ರಸೂತಿ ವೇಳೆಯಲ್ಲಿನ ತೀವ್ರತರಹದ ರಕ್ತಸ್ರಾವ ತಡೆಗಟ್ಟಲು ಹಾಗೂ ಚಿಕಿತ್ಸೆ ನೀಡಲು ಅಗತ್ಯವಿರುವ ಉಪಕರಣಗಳ ಖರೀದಿ ಜತೆಗೆ, ಹಾಸಿಗೆಗಳ ಹೆಚ್ಚಳ, ಆಸ್ಪತ್ರೆಗಳ ಮೇಲ್ದರ್ಜೆಗೆ, ಮೇಲ್ವಿಚಾರಣೆ ಸೌಲಭ್ಯ, ವಿಶ್ರಾಂತಿ ಕೊಠಡಿ, ಸಹಾಯವಾಣಿ ಸೇರಿ ವಿವಿಧ ವ್ಯವಸ್ಥೆಗೆ ಅನುದಾನ ಹಂಚಿಕೆ ಮಾಡಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.