ಬಂಧನ – ಸಾಂದರ್ಭಿಕ ಚಿತ್ರ
ಬೆಂಗಳೂರು: ಮಟ್ಕಾ ದಂಧೆ ನಡೆಸುತ್ತಿದ್ದ ಆರೋಪದ ಮೇಲೆ ರೌಡಿ ಶೀಟರ್ ಸೈಯದ್ ನವಾಬ್ ಎಂಬಾತನನ್ನು ಸಿಸಿಬಿ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.
ಬನಶಂಕರಿ ಪೊಲೀಸ್ ಠಾಣೆಯಲ್ಲಿ ರೌಡಿಶೀಟರ್ ಆಗಿದ್ದು, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾದ ಆರೋಪಕ್ಕೆ ಸಂಬಂಧಿಸಿ ಈತನ ವಿರುದ್ಧ ವಿವಿಧ ಠಾಣೆಗಳಲ್ಲಿ ಏಳು ಪ್ರಕರಣಗಳು ದಾಖಲಾಗಿವೆ.
ಏಳು ಪ್ರಕರಣಗಳ ಪೈಕಿ ಮೂರು ಪ್ರಕರಣದಲ್ಲಿ ನ್ಯಾಯಾಲಯ ಈತನಿಗೆ ಶಿಕ್ಷೆ ವಿಧಿಸಿದೆ. ಇನ್ನೂ ನಾಲ್ಕು ಪ್ರಕರಣಗಳ ವಿಚಾರಣೆ ನಡೆಯುತ್ತಿದೆ. ಜಾಮೀನಿನ ಮೇಲೆ ಹೊರ ಬಂದು ಮತ್ತೆ ಮಟ್ಕಾ ದಂಧೆ ಹಾಗೂ ಸಮಾಜಘಾತುಕ ಚಟುವಟಿಕೆಯಲ್ಲಿ ಭಾಗಿಯಾಗುತ್ತಿದ್ದ. ಕಾನೂನು ಬಾಹಿರ ಕೃತ್ಯಗಳನ್ನು ನಿಯಂತ್ರಿಸುವುದು ಕಷ್ಟ ಸಾಧ್ಯವಾದ ಕಾರಣ ಮತ್ತೆ ಈತನನ್ನು ಪ್ರತಿಬಂಧಕ ಕಾಯಿದೆ ಅಡಿ ಬಂಧನದಲ್ಲಿಡಲು ಸಿಸಿಬಿ ಅಧಿಕಾರಿಗಳು ನಗರ ಪೊಲೀಸ್ ಕಮೀಷನರ್ಗೆ ಪ್ರಸ್ತಾವ ಸಲ್ಲಿಸಿದ್ದರು.
ಪೊಲೀಸ್ ಕಮೀಷನರ್ ಬಿ. ದಯಾನಂದ ಅವರ ಆದೇಶದಂತೆ ಆರೋಪಿಯನ್ನು ಬಂಧಿಸಿ, ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.