ADVERTISEMENT

ಎಂ. ರಾಮ ವಿರುದ್ಧ ಕ್ರಮಕ್ಕೆ ದಸಂಸ ಆಗ್ರಹ

​ಪ್ರಜಾವಾಣಿ ವಾರ್ತೆ
Published 27 ಆಗಸ್ಟ್ 2019, 19:54 IST
Last Updated 27 ಆಗಸ್ಟ್ 2019, 19:54 IST

ಬೆಂಗಳೂರು: ‘ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಕೆಲಸ ಗಿಟ್ಟಿಸಿಕೊಂಡಿರುವ ಕೆಐಎಡಿಬಿ ‌ಮುಖ್ಯ ಅಭಿವೃದ್ಧಿ ಅಧಿಕಾರಿ ಎಂ. ರಾಮ ವಿರುದ್ಧ ಕಾನೂನು ಕ್ರಮ ಜರುಗಿಸಬೇಕು’ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್ ಆಗ್ರಹಿಸಿದರು.

‘ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿರುವ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ವರದಿ ನೀಡಿದೆ. ಕ್ರಮ ಜರುಗಿಸಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ಅವರೂ ಸೂಚನೆ ನೀಡಿದ್ದಾರೆ. ಆದರೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಗೌರವ ಗುಪ್ತ ಇದಕ್ಕೆ ಕಿಮ್ಮತ್ತು ನೀಡಿಲ್ಲ. ಈ ಬಗ್ಗೆ ತನಿಖೆ ನಡೆಸಬೇಕು’ ಎಂದು ಅವರು ಸುದ್ದಿಗೋಷ್ಠಿಯಲ್ಲಿ ಒತ್ತಾಯಿಸಿದರು.

‘ರಾಮ ಅವರು ಗಿಟ್ಟಿಸಿಕೊಂಡಿರುವ ಹುದ್ದೆಯನ್ನು ಹೈಕೋರ್ಟ್ ಆದೇಶದಂತೆ ಟಿ.ಆರ್. ಸ್ವಾಮಿ ಅವರಿಗೇ ನೀಡಬೇಕು. ಆದರೆ, ಕಾನೂನು ಬಾಹಿರವಾಗಿ ಮುಖ್ಯ ಅಭಿವೃದ್ಧಿ ಅಧಿಕಾರಿ ಮತ್ತು ಮುಖ್ಯ ಎಂಜಿನಿಯರ್–1 ಹುದ್ದೆ ಹುಟ್ಟು ಹಾಕಲಾಗಿದೆ. ಪರಿಶಿಷ್ಟ ಜಾತಿಗೆ ಸೇರದ ರಾಮ ಅವರಿಗೆ ಈ ಹುದ್ದೆ ಕಲ್ಪಿಸುವ ಮೂಲಕ ದಲಿತ ಸಮುದಾಯದ ನೌಕರರಿಗೆ ಅನ್ಯಾಯ ಮಾಡಲಾಗಿದೆ’ ಎಂದು ಅವರು ದೂರಿದರು.

ADVERTISEMENT

‘ಕೆಐಎಡಿಬಿಯಲ್ಲಿ ಅನೇಕ ಅಕ್ರಮಗಳನ್ನು ನಡೆಸಿ ಸಂಸ್ಥೆಗೆ ಕೋಟ್ಯಂತರ ರೂಪಾಯಿ ನಷ್ಟ ಉಂಟು ಮಾಡಿರುವ ಆರೋಪಗಳು ರಾಮ ವಿರುದ್ಧ ಇವೆ. ಮೇಲ್ಜಾತಿಯ ಅಧಿಕಾರಿಗಳಿಂದ ದಲಿತ ಸಮುದಾಯದ ನೌಕರರಿಗೆ ನಿರಂತರವಾಗಿ ಅನ್ಯಾಯ ಆಗುತ್ತಿರುವ ಬಗ್ಗೆ ಹಲವು ಬಾರಿ ಸರ್ಕಾರದ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ’ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.