
ಕಡತ
(ಸಾಂದರ್ಭಿಕ ಚಿತ್ರ)
ಬೆಂಗಳೂರು: ‘ಮುಖ್ಯವಾಹಿನಿ ಮಾಧ್ಯಮವು ಇಂದಿಗೂ ತನ್ನ ಗಟ್ಟಿತನದ ಮೂಲಕ ಘನತೆಯನ್ನು ಉಳಿಸಿಕೊಂಡು ಬಂದಿದೆ. ಇದೇ ನಮಗೆಲ್ಲ ಆಶಾದಾಯಕ ಬೆಳವಣಿಗೆ’ ಎಂದು ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ವೂಡೇ ಪಿ.ಕೃಷ್ಣ ಹೇಳಿದರು.
ಬೆಂಗಳೂರು ನಾಗರೀಕರ ವೇದಿಕೆ ಮತ್ತು ಬುದ್ಧ ಬಸವ ಗಾಂಧಿ ಸಾಂಸ್ಕೃತಿಕ ಟಸ್ಟ್ ಆಶ್ರಯದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಅವರಿಗೆ ಲೋಹಿಯಾ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.
‘ರಾಮಮನೋಹರ ಲೋಹಿಯಾ ಅವರು ದೇಶದ ರಾಜಕಾರಣದಲ್ಲಿ ಚಲನೆಯನ್ನು ತಂದವರು. ಲೋಹಿಯಾ ವಾದದಲ್ಲಿ ಬೆಳೆದು ಅರಳಿದ ಪ್ರತಿಭೆಗಳು ದೇಶದ ಉದ್ದಗಲಕ್ಕೂ ಇದ್ದಾರೆ. ಸಂಘಟನೆ, ಸಂಸ್ಕಾರ, ಸೇವೆ ವ್ಯಕ್ತಿಯ ಸಾಧನೆಗೆ ಮುಖ್ಯ. ಇನ್ನೊಬ್ಬರ ಸೇವೆಯಲ್ಲಿ ನಮ್ಮನ್ನು ನಾವು ಕಳೆದುಕೊಳ್ಳುವುದೇ ಸಾರ್ಥಕ ಬದುಕು’ ಎಂದು ಅಭಿಪ್ರಾಯಪಟ್ಟರು.
ಕನ್ನಡಪ್ರಭ ಸಂಪಾದಕ ರವಿ ಹೆಗಡೆ, ತ್ಯಾಗರಾಜ ಕೋ-ಆಪರೇಟಿವ್ ಬ್ಯಾಂಕ್ ಅಧ್ಯಕ್ಷ ಎಂ.ಆರ್.ವೆಂಕಟೇಶ್, ದೂರದರ್ಶನದ ಕಾರ್ಯಕ್ರಮ ಮುಖ್ಯಸ್ಥೆ ಎಚ್.ಎನ್.ಆರತಿ ಮಾತನಾಡಿದರು.
ಕಾರ್ಯಕ್ರಮದ ಸಂಯೋಜಕ ಎಸ್.ರಾಮಲಿಂಗೇಶ್ವರ (ಸಿಸಿರಾ) ಸ್ವಾಗತಿಸಿದರು. ಭೂಮಿ ಫೌಂಡೇಷನ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, ಪತ್ರಿಕಾ ವಿತರಕರ ಸಂಘ, ರಂಗಸಿರಿ ಬಳಗ ಮತ್ತು ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.