ಕೆಂಗೇರಿ: ಬಿಜಿಎಸ್ ಗ್ಲೋಬಲ್ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ ಸಂಸ್ಥೆಯ ಘಟಿಕೋತ್ಸವದಲ್ಲಿ ಪದವಿ ವಿಭಾಗದ 140 ಹಾಗೂ ಸ್ನಾತಕೋತ್ತರ ಪದವಿ ವಿಭಾಗದ 34 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು.
ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ 2023-2024ನೇ ಸಾಲಿನ ಎಂ.ಬಿ.ಬಿ.ಎಸ್ ಪರೀಕ್ಷೆಯಲ್ಲಿ ಮೊದಲ ರ್ಯಾಂಕ್ (ಓವರ್ ಆಲ್) ಪಡೆದ ವಿದ್ಯಾರ್ಥಿನಿ ಲಾವಣ್ಯ.ಬಿ.ಎಸ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿದ ಅಖಿಲ ಭಾರತ ಭಯೋತ್ಪಾದನಾ ವಿರೋಧಿ ರಂಗದ ಅಧ್ಯಕ್ಷ ಮಣಿಂದರ್ ಜೀತ್ ಸಿಂಗ್ ಬಿಟ್ಟಾ ಮಾತನಾಡಿ, ‘ದೇಶ ರಕ್ಷಣೆ ಎಲ್ಲರ ಜವಾಬ್ದಾರಿ. ಯುವಕರನ್ನು ಉನ್ನತಿಯತ್ತ ಕೊಂಡೊಯ್ಯುವ ಹಾಗೂ ಸ್ವಯಂ ಯೋಧರನ್ನಾಗಿ ರೂಪಿಸುವ ಹೊಣೆಗಾರಿಕೆ ಎಲ್ಲರ ಮೇಲಿದೆ’ ಎಂದು ಹೇಳಿದರು.
ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರಗಳಿಂದ ದೇಶದ ಹಲವು ರಾಜ್ಯಗಳಲ್ಲಿ ನಡೆಯುತ್ತಿದ್ದ ಭಯೋತ್ಪಾದನೆಗೆ ಕಡಿವಾಣ ಬಿದ್ದಿದೆ. ಕಾಶ್ಮೀರದಲ್ಲಿ ಶಾಂತಿ ನೆಲಸಿದ್ದು, ಕಾಶ್ಮೀರ ಎಂದಿಗೂ ಭಾರತದ ಭಾಗವಾಗಿರಲಿದೆ ಹೇಳಿದರು.
ಲೋಕಸಭಾ ಸದಸ್ಯ ಡಾ.ಕೆ.ಸುಧಾಕರ್ ಮಾತನಾಡಿ, ಪ್ರತಿ ವರ್ಷ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳು ವೈದ್ಯಕೀಯ ಶಿಕ್ಷಣ ಪಡೆದು ವೃತ್ತಿಯಲ್ಲಿ ತೊಡಗಿಕೊಳ್ಳುತ್ತಿದ್ದಾರೆ. ಇಂತಹ ವೈದ್ಯರು ಸ್ವಯಂ ಪ್ರೇರಿತವಾಗಿ ಒಂದು ವರ್ಷ ಗ್ರಾಮೀಣ ಪ್ರದೇಶಗಳಲ್ಲಿ ಸೇವೆ ಸಲ್ಲಿಸಿದರೆ ಭಾರತದ ಆರೋಗ್ಯ ವ್ಯವಸ್ಥೆಯೇ ಬದಲಾಗಲಿದೆ ಎಂದು ಹೇಳಿದರು.
ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿ, ‘ರೋಗಿಗಳಲ್ಲಿ ಆತ್ಮಸ್ಥೈರ್ಯ ಉದ್ದೀಪನಗೊಳಿಸಿ, ಪ್ರೀತಿ ಹಾಗೂ ಕಾಳಜಿಯೊಂದಿಗೆ ಚಿಕಿತ್ಸೆ ನೀಡಿದರೆ ಅರ್ಧದಷ್ಟು ರೋಗ ಗುಣಮುಖವಾಗುತ್ತದೆ. ಈ ಅಂಶಗಳನ್ನು ಯುವ ವೈದ್ಯರು ಮನದಟ್ಟು ಮಾಡಿಕೊಳ್ಳಬೇಕು’ ಎಂದು ಕಿವಿಮಾತು ಹೇಳಿದರು.
ಬಿಜಿಎಸ್ ಮತ್ತು ಎಸ್ಜೆಬಿ ಸಮೂಹ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಪ್ರಕಾಶನಾಥ ಸ್ವಾಮೀಜಿ, ಅಭಯ್ ಕುಮಾರ್ ಜೈನ್, ಕುಲಪತಿ ಬಿ.ಸಿ.ಭಗವಾನ್, ಮಾಜಿ ಶಾಸಕ ಎಸ್.ಆರ್.ಮಹೇಶ್, ಡೀನ್ ಮೋಹನ್ ಕುಮಾರ್, ಮೆಡಿಕಲ್ ಸೂಪರಿಂಟೆಂಡೆಂಟ್ ಕುಲಕರ್ಣಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.