ADVERTISEMENT

ಮೆಜೆಸ್ಟಿಕ್‌ ಕೆಳಸೇತುವೆಯಲ್ಲಿ ವ್ಯಾಪಾರ: ಪ್ರಶ್ನಿಸಿದ್ದಕ್ಕೆ ಹಲ್ಲೆ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2019, 19:34 IST
Last Updated 10 ನವೆಂಬರ್ 2019, 19:34 IST

ಬೆಂಗಳೂರು: ಹೈಕೋರ್ಟ್‌ ಆದೇಶ ಉಲ್ಲಂಘಿಸಿ ಮೆಜೆಸ್ಟಿಕ್‌ನ ಕೆಳಸೇತುವೆಯಲ್ಲಿ ಅಂಗಡಿ ಇಟ್ಟುಕೊಂಡು ವ್ಯಾಪಾರ ಮಾಡುತ್ತಿರುವುದನ್ನು ಪ್ರಶ್ನಿಸಿದ್ದ ರವಿಕುಮಾರ್ ಕೆಂಚನಹಳ್ಳಿ ಎಂಬುವರ ಮೇಲೆ ಗುಂಪೊಂದು ಹಲ್ಲೆ ಮಾಡಿದ್ದು, ಆ ಸಂಬಂಧ ಉಪ್ಪಾರಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ನ. 1ರಂದು ಬೆಳಿಗ್ಗೆ ನಡೆದಿರುವ ಘಟನೆ ಸಂಬಂಧ ರವಿಕುಮಾರ್ ದೂರು ನೀಡಿದ್ದಾರೆ. ಎಫ್‌ಐಆರ್‌ ದಾಖಲಿಸಿಕೊಂಡು, ಆರೋಪಿಗಳನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಪೊಲೀಸರು ಹೇಳಿದರು.

ಹೈಕೋರ್ಟ್‌ಗೆ ಅರ್ಜಿ:‘ಮೆಜೆಸ್ಟಿಕ್‌ ಕೆಳಸೇತುವೆ, ಎಸ್‌.ಸಿ. ರಸ್ತೆ ಮತ್ತು ಅಣ್ಣಮ್ಮ ದೇವಸ್ಥಾನ ರಸ್ತೆಯಲ್ಲಿ ಅಕ್ರಮವಾಗಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡಲಾಗುತ್ತಿತ್ತು. ಅದನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಸಾರ್ವಜನಿಕ ಅರ್ಜಿ ಸಲ್ಲಿಸಿದ್ದೆ’ ಎಂದು ರವಿಕುಮಾರ್ ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

‘ಅಂಗಡಿ ತೆರವು ಮಾಡುವಂತೆ ಬಿಬಿಎಂಪಿ ಆಯುಕ್ತರಿಗೆ ಸೂಚಿಸಿ ಹೈಕೋರ್ಟ್ ಈಗಾಗಲೇ ಆದೇಶ ಹೊರಡಿಸಿದೆ. ಅಷ್ಟಾದರೂ ಮೆಜೆಸ್ಟಿಕ್‌ ಕೆಳಸೇತುವೆಯಲ್ಲಿ ಅಂಗಡಿಗಳನ್ನು ಇಟ್ಟುಕೊಂಡು ವ್ಯಾಪಾರ ಮಾಡಲಾಗುತ್ತಿದೆ. ನ. 1ರಂದು ಸ್ಥಳಕ್ಕೆ ಹೋಗಿ ಅಂಗಡಿಗಳ ಫೋಟೊ ತೆಗೆದುಕೊಳ್ಳುತ್ತಿದ್ದೆ. ಅದೇ ವೇಳೆ 20ಕ್ಕೂ ಹೆಚ್ಚು ಮಂದಿ ಗುಂಪು ಕಟ್ಟಿಕೊಂಡು ಜಗಳಕ್ಕೆ ಬಂದಿದ್ದರು. ಅದರಲ್ಲಿ ಐವರು ನನ್ನ ಮೇಲೆ ಹಲ್ಲೆ ಮಾಡಿದರು’ ಎಂದು ರವಿಕುಮಾರ್ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.