ಬೆಂಗಳೂರು: ‘ನನ್ನ ವಿರುದ್ಧ ಸೈಬರ್ ಕ್ರೈಂ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು’ ಎಂದು ಕೋರಿ ನಟಿ ಶ್ರುತಿ ಹರಿಹರನ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಈ ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ.
‘ನಾನು ನಟ ಅರ್ಜುನ್ ಸರ್ಜಾ ವಿರುದ್ಧ ಸಾಮಾಜಿಕ ಜಾಲಾತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದೇನೆ ಮತ್ತು ವಂಚನೆ ಮಾಡಿದ್ದೇನೆ ಎಂದು ಅರ್ಜುನ್ ಸರ್ಜಾ ಅವರ ಮ್ಯಾನೇಜರ್ ಶಿವಾರ್ಜುನ್ ಅವರು ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾರೆ. ಈ ದೂರಿನ ಆಧಾರದಲ್ಲಿ ಸೈಬರ್ ಕ್ರೈಂ ಪೊಲೀಸರು ನನ್ನ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ’ ಎಂದು ಶ್ರುತಿ ಅರ್ಜಿಯಲ್ಲಿ ವಿವರಿಸಿದ್ದಾರೆ.
‘ನಾನು ಸರ್ಜಾಗೆ ವಂಚನೆ ಮಾಡಿಲ್ಲ. ಯಾವುದೇ ರೀತಿಯ ಅಪಮಾನಕರ ಹೇಳಿಕೆ ಪ್ರಕಟಿಸಿಲ್ಲ. ಸರ್ಜಾ ವ್ಯಕ್ತಿತ್ವಕ್ಕೆ ಮಸಿ ಬಳಿಯಲು ವ್ಯವಸ್ಥಿತವಾಗಿ ಷಡ್ಯಂತ್ರ ರೂಪಿಸಿದ್ದೇನೆ ಎಂಬುದೆಲ್ಲಾ ಸುಳ್ಳು. ಪೊಲೀಸರು ವ್ಯಾಪ್ತಿ ಮೀರಿ ಎಫ್ಐಆರ್ ದಾಖಲಿಸಿದ್ದಾರೆ. ಆದ್ದರಿಂದ ಎಫ್ಐಆರ್ ರದ್ದು ಮಾಡಬೇಕು’ ಎಂದು ಅವರು ಕೋರಿದ್ದಾರೆ.
ಶ್ರುತಿ ಪರವಾಗಿ ವಕೀಲ ಎಸ್.ಬಾಲಕೃಷ್ಣನ್ ವಕಾಲತ್ತು ವಹಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.