ಬೆಂಗಳೂರು: ‘ನಮ್ಮ ಮೆಟ್ರೊ’ ಎರಡನೇ ಹಂತದ ಗೊಟ್ಟಿಗೆರೆ–ನಾಗವಾರ (ರೀಚ್ 6) ಮಾರ್ಗ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 80ಕ್ಕೂ ಹೆಚ್ಚು ಕಾರ್ಮಿಕರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಈ ಮಾರ್ಗದ ನಿರ್ಮಾಣದ ಗುತ್ತಿಗೆ ಪಡೆದಿರುವ ಎಲ್ ಆ್ಯಂಡ್ ಟಿ ಕಂಪನಿಯು, 200ಕ್ಕೂ ಹೆಚ್ಚು ಕಾರ್ಮಿಕರ ಆರೋಗ್ಯ ತಪಾಸಣೆ ನಡೆಸಿದಾಗ, ಸೋಂಕು ತಗಲಿರುವುದು ಗೊತ್ತಾಗಿದೆ.
‘ಹೊರರಾಜ್ಯದಿಂದ ಬಂದ ಕಾರ್ಮಿಕರೊಬ್ಬರಿಗೆ ಕೊರೊನಾ ಪಾಸಿಟಿವ್ ಬಂದ ನಂತರ ಎಲ್ಲ ಕಾರ್ಮಿಕರ ಪರೀಕ್ಷೆ ನಡೆಸಲಾಯಿತು. ನಂತರ, ಈ ಪ್ರಕರಣಗಳು ಬೆಳಕಿಗೆ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ ಆ್ಯಂಡ್ ಟಿ ಕಂಪನಿಯು ಎಲ್ಲರ ಆರೋಗ್ಯ ತಪಾಸಣೆ ನಡೆಸಿದೆ. ಕೊರೊನಾ ಪಾಸಿಟಿವ್ ಬಂದಿರುವ ಎಲ್ಲ ಕಾರ್ಮಿಕರಿಗೆ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಸೋಂಕಿತರನ್ನು ಕೋವಿಡ್ ಆರೈಕೆ ಕೇಂದ್ರಕ್ಕೆ ದಾಖಲಿಸಲಾಗಿದೆ’ ಎಂದು ಬಿಎಂಆರ್ಸಿಎಲ್ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಯಶವಂತ್ ಚೌಹಾಣ್ ತಿಳಿಸಿದರು.
‘ಕಾರ್ಮಿಕರು ಉಳಿದುಕೊಂಡಿರುವ ಸ್ಥಳಗಳಲ್ಲಿ ಹಾಗೂ ಕೆಲಸ ಸ್ಥಳಗಳಲ್ಲಿ ಸರ್ಕಾರದ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಲಾಗುತ್ತಿದೆ. ಮೊದಲು ಸೋಂಕು ತಗುಲಿರುವುದು ಹೊಸ ಕಾರ್ಮಿಕನಿಗೆ. ಅವರಿಂದ ಎಲ್ಲರಿಗೂ ಹರಡಿದೆ’ ಎಂದು ಅವರು ಹೇಳಿದರು.
‘ಸೋಂಕಿಗೆ ಒಳಗಾಗಿ ಕ್ವಾರಂಟೈನ್ನಲ್ಲಿರುವ ಕಾರ್ಮಿಕರಿಗೆ ವೇತನ ನೀಡಲಾಗುವುದು’ ಎಂದು ಅವರು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.