ಬೆಂಗಳೂರು: ‘ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಬಳಸಬೇಕಾದ ಸಂಚಿತ ನಿಧಿಯನ್ನು ಕಾಲಕಾಲಕ್ಕೆ ಸಮರ್ಪಕವಾಗಿ ಬಳಸುವ ಅಗತ್ಯವಿದೆ’ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.
ವೇದಾಂತ ಲಿಮಿಟೆಡ್ ಕಂಪನಿಗೆ ಸಂಬಂಧಿಸಿದ ಗಣಿ ಪ್ರಕರಣವೊಂದನ್ನು ಮುಖ್ಯ ನ್ಯಾಯಮೂರ್ತಿ ದಿನೇಶ್ ಮಾಹೇಶ್ವರಿ ಹಾಗೂ ನ್ಯಾಯಮೂರ್ತಿ ಎಸ್.ಸುಜಾತ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ಹಾಜರಿದ್ದ ಹಿರಿಯ ವಕೀಲ ಕೆ.ಎನ್.ಪಣೀಂದ್ರ ಅವರನ್ನು ‘ಈ ಹಣ ಎಷ್ಟಿದೆ, ಹೇಗೆ ಉಪಯೋಗವಾಗುತ್ತಿದೆ, ಇದು ಯಾರ ಉಸ್ತುವಾರಿಯಲ್ಲಿ ನಡೆಯುತ್ತಿದೆ’ ಎಂದು ಮುಖ್ಯ ನ್ಯಾಯಮೂರ್ತಿಗಳು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಫಣೀಂದ್ರ ಅವರು, ‘ಅರಣ್ಯೀಕರಣ ಪರಿಹಾರ ನಿಧಿ ನಿರ್ವಹಣೆ ಮತ್ತು ಯೋಜನೆ ಹಾಗೂ ಸುಧಾರಣಾ ನಿಧಿಯ ಅಡಿಯಲ್ಲಿ 2010ರಿಂದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ₹ 13 ಸಾವಿರ ಕೋಟಿಯಷ್ಟಿದೆ. ಇಷ್ಟು ಹಣ ಕಬ್ಬಿಣದ ಅದಿರು ಗಣಿಗಾರಿಕೆಯಿಂದಲೇ ಸಂಗ್ರಹವಾಗಿದೆ’ ಎಂದು ತಿಳಿಸಿದರು.
‘ಈ ಹಣವನ್ನು ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಉಪಯೋಗಿಸಲಾಗುತ್ತದೆ. ಆದರೆ, ಇನ್ನೂ ಬಳಸಿಲ್ಲ’ ಎಂದು ನ್ಯಾಯಮೂರ್ತಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.