ADVERTISEMENT

ಮಾರುಕಟ್ಟೆಗೆ ಸಚಿವರುಗಳ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 3 ಏಪ್ರಿಲ್ 2020, 6:20 IST
Last Updated 3 ಏಪ್ರಿಲ್ 2020, 6:20 IST
   

ಬೆಂಗಳೂರು: ಶುಕ್ರವಾರ ಬೆಳ್ಳಂ ಬೆಳಗ್ಗೆ ನಾಲ್ವರು ಸಚಿವರು ಎಪಿಎಂಸಿ ಮಾರುಕಟ್ಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ತೋಟಗಾರಿಕೆ ಸಚಿವ ಡಾ. ನಾರಾಯಣಗೌಡ, ಸಹಕಾರ ಸಚಿವ ಎಸ್ ಟಿ ಸೋಮಶೇಖರ್, ಆಹಾರ ಸಚಿವ ಗೋಪಾಲಯ್ಯ, ಕೃಷಿ ಸಚಿವ ಬಿ.ಸಿ ಪಾಟೀಲ್ ಹಾಗೂ ಸಿಎಂ ರಾಜಕೀಯ ಕಾರ್ಯದರ್ಶಿ ವಿಶ್ವನಾಥ್ ಮಾರುಕಟ್ಟೆಗೆ ಭೇಟಿ ನೀಡಿದ್ದರು.

ಲಾಕ್‌ಡೌನ್ ಹಿನ್ನೆಲೆಯಲ್ಲಿ ತರಕಾರಿ, ಹಣ್ಣುಗಳ ಸಾಗಾಟಕ್ಕೆ ಅಡಚಣೆ ಆಗಿತ್ತು. ಸಾಗಾಟಕ್ಕೆ ಈಗ ಅವಕಾಶ ಕಲ್ಪಿಸಿದ ಹಿನ್ನೆಲೆಯಲ್ಲಿ ಮಾರುಕಟ್ಟೆಗೆ ತರಕಾರಿ ಬರಲಾರಂಭಿಸಿದೆ. ಈ ಹಿನ್ನೆಲೆಯಲ್ಲಿ ರೈತರು, ವ್ಯಾಪಾರಸ್ಥರು ಸಚಿವರ ಬಳಿ ಸಂತಸ ವ್ಯಕ್ತಪಡಿಸಿದ್ದಾರೆ.

ADVERTISEMENT

ಬ್ಯಾಟರಾಯನ ಪುರ ಮಾರುಕಟ್ಟೆಗೆ ಬೆಳಿಗ್ಗೆ 6 ಗಂಟೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು,ಮಾರುಕಟ್ಟೆಯಲ್ಲಿ ಸ್ವಚ್ಛತೆ, ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ಹಾಗೂ ಕಡ್ಡಾಯ ಮಾಸ್ಕ್ ಧರಿಸುವಂತೆ ಸಚಿವರು ಸೂಚಿಸಿದರು. ಬಳಿಕ ದಾಸನಪುರ ಉಪ ಮಾರುಕಟ್ಟೆಗೆ ಸಚಿವರೆಲ್ಲ ಭೇಟಿ ನೀಡಿದ್ರು. ತರಕಾರಿ ಹಾಗೂ ಈರುಳ್ಳಿ ಮಾರುಕಟ್ಟೆಗೆ ತೆರಳಿ ವ್ಯಾಪಾರಸ್ಥರು ಮತ್ತು ರೈತರ ಜೊತೆ ಮಾತುಕತೆ ನಡೆಸಿದ್ದಾರೆ.

ರೈತರಿಂದ ಎಷ್ಟು ಹಣಕ್ಕೆ ಖರೀದಿಸಲಾಗಿದೆ ಹಾಗೂ ಎಷ್ಟು ಹಣಕ್ಕೆ ಗ್ರಾಹಕರಿಗೆ ನೀಡಲಾಗುತ್ತಿದೆ ಎನ್ನುವುದನ್ನು ಸಚಿವರು ಪರಿಶೀಲನೆ ಮಾಡಿದರು.ಈ ವೇಳೆ ಮಾಧ್ಯಮದೊಂದಿಗೆ ಮಾತನಾಡಿದ ತೋಟಗಾರಿಕಾ ಸಚಿವ ಡಾ. ನಾರಾಯಣಗೌಡ, ರೈತರು ಬೆಳೆದ ಬೆಳೆ ಮಾರಾಟವಾಗುತ್ತಿಲ್ಲ, ಸಾಗಾಟಕ್ಕೂ ಸಮಸ್ಯೆ ಆಗಿದೆ ಎಂಬ ಆರೋಪ ಇತ್ತು. ಈಗ ಎಲ್ಲ ಸಮಸ್ಯೆ ಪರಿಹರಿಸಲಾಗಿದೆ. ರೈತರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೆರಡು ದಿನಗಳಲ್ಲಿ ಎಲ್ಲ ಸಮಸ್ಯೆ ಸರಿಹೋಗಲಿದೆ. ಗ್ರಾಹಕರಿಗೂ ತರಕಾರಿ, ಹಣ್ಣು ಎಂದಿನಂತೆ ಲಭ್ಯವಾಗಲಿದೆ. ಮಾರುಕಟ್ಟೆ ಆರಂಭವಾಗಿರುವ ಕಾರಣ ರೈತರಿಗೂ ಅನುಕೂಲ, ಜನಸಾಮಾನ್ಯರಿಗೂ ಅನುಕೂಲವಾಗಲಿದೆ. ಮಧ್ಯವರ್ತಿಗಳ ಹಾವಳಿಗೂ ಕಡಿವಾಣ ಹಾಕಲಾಗಿದೆ ಎಂದು ಸಚಿವ ನಾರಾಯಣಗೌಡ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.