ADVERTISEMENT

ಹಣ ದುರ್ಬಳಕೆ: ತನಿಖೆಗೆ ಕೋರಿದ ಅರ್ಜಿ ವಜಾ

ಅಲ್ಪಸಂಖ್ಯಾತ ವಿದ್ಯಾರ್ಥಿಗಳ ಯೋಜನೆ ಹಣ ದುರ್ಬಳಕೆ ಆರೋಪ

​ಪ್ರಜಾವಾಣಿ ವಾರ್ತೆ
Published 17 ನವೆಂಬರ್ 2021, 15:46 IST
Last Updated 17 ನವೆಂಬರ್ 2021, 15:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ‘ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಕೌಶಲ ತರಬೇತಿಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿವಿಧ ಯೋಜನೆಗಳ ಕೋಟ್ಯಂತರ ರೂಪಾಯಿ ಅನುದಾನವನ್ನು ಅಲ್-ಅಮೀನ್ ಶಿಕ್ಷಣ ಸಂಸ್ಥೆ ಹಾಗೂ ಗೌಸಿಯಾ ಕೈಗಾರಿಕಾ ಮತ್ತು ಎಂಜಿನಿಯರಿಂಗ್ ಸಂಸ್ಥೆ ದುರ್ಬಳಕೆ ಮಾಡಿಕೊಂಡಿವೆ’ ಎಂದು ಆರೋಪಿಸಿ ತನಿಖೆಗೆ ನಿರ್ದೇಶಿಸುವಂತೆ ಕೋರಲಾದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.

ಈ ಸಂಬಂಧ ಉಬೇದುಲ್ಲಾ ಷರೀಫ್ ಎಂಬುವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ವಿಚಾರಣೆ ವೇಳೆ ಕೇಂದ್ರ ಸರ್ಕಾರದ ವಕೀಲ ಎಂ.ಎನ್. ಕುಮಾರ್, ‘ಅರ್ಜಿದಾರರ ಆರೋಪಗಳು ಆಧಾರರಹಿತವಾಗಿವೆ.ಫಲಾನುಭವಿ ವಿದ್ಯಾರ್ಥಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ಪಾವತಿಸಲಾಗಿದೆ. ಅನುದಾನದ ದುರ್ಬಳಕೆ ಅಥವಾ ಯೋಜನೆಯ ಅನುಷ್ಠಾನದಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ. ಈ ಕುರಿತ ಎಲ್ಲ ವಿವರಗಳೂ ಸಾರ್ವಜನಿಕವಾಗಿ ಲಭ್ಯ ಇವೆ’ ಎಂದು ವಿವರಿಸಿದರು.

ADVERTISEMENT

ಇದನ್ನು ಪರಿಗಣಿಸಿದ ನ್ಯಾಯಪೀಠ, ‘ಈ ಪ್ರಕರಣದಲ್ಲಿ ನ್ಯಾಯಾಲಯ ಮಧ್ಯಪ್ರವೇಶಿಸುವ ಅಥವಾ ಪ್ರಕರಣವನ್ನು ತನಿಖಾ ಸಂಸ್ಥೆಗೆ ವಹಿಸುವ ಅವಶ್ಯಕತೆ ಕಂಡು ಬರುತ್ತಿಲ್ಲ. ಒಂದೊಮ್ಮೆ ನಿರ್ದಿಷ್ಟವಾಗಿ ಯಾವುದಾದರೂ ಪ್ರಕರಣದಲ್ಲಿ ಅವ್ಯವಹಾರ ಅಥವಾ ಹಣದ ದುರ್ಬಳಕೆ ಬಗ್ಗೆ ಅರ್ಜಿದಾರರಿಗೆ ಅನುಮಾನವಿದ್ದರೆ, ಲೋಕಾಯುಕ್ತ ಅಥವಾ ಕೇಂದ್ರ ವಿಚಕ್ಷಣಾ ಆಯುಕ್ತರಿಗೆ ಮನವಿ ಸಲ್ಲಿಸಿ ಪರಿಹಾರ ಪಡೆದುಕೊಳ್ಳಬಹುದು’ ಎಂದು ಸೂಚಿಸಿ ಅರ್ಜಿ ವಜಾಗೊಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.