ADVERTISEMENT

ಎಲ್ಇಡಿ ಬೀದಿದೀಪ ಅಳವಡಿಕೆ ಕಾಮಗಾರಿ ಚುರುಕುಗೊಳಿಸಿ: ಶಾಸಕ ಆರ್. ಮಂಜುನಾಥ್

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2021, 22:28 IST
Last Updated 7 ಆಗಸ್ಟ್ 2021, 22:28 IST
ಆರ್. ಮಂಜುನಾಥ್
ಆರ್. ಮಂಜುನಾಥ್   

ಬೆಂಗಳೂರು: ‘ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಿರುವ ಬೀದಿದೀಪಗಳಿಗೆ ಬದಲಾಗಿ ಎಲ್‌ಇಡಿ ದೀಪಗಳನ್ನು ಅಳವಡಿಸುವ ಕಾಮಗಾರಿಯ ಅನುಷ್ಠಾನಕ್ಕೆ ಮೀನಮೇಷ ಎಣಿಸಲಾಗುತ್ತಿದೆ. ದಾಸರಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿ ಈ ಕಾಮಗಾರಿಗೆ ಕೂಡಲೇ ಚಾಲನೆ ನೀಡಬೇಕು’ ಎಂದು ಈ ಕ್ಷೇತ್ರದ ಶಾಸಕ ಆರ್. ಮಂಜುನಾಥ್ ಒತ್ತಾಯಿಸಿದ್ದಾರೆ.

‘ಈಗಿರುವ ಬೀದಿದೀಪಗಳನ್ನು ಎಲ್‌ಇಡಿ ದೀಪಗಳನ್ನಾಗಿ ಬದಲಿಸಲು ಒಂಟಿ ಪ್ಯಾಕೇಜ್‌ ಅಡಿ ಜಾಗತಿಕ ಟೆಂಡರ್‌ ಕರೆಯಲಾಗಿತ್ತು. ಈ ಪ್ರಕ್ರಿಯೆ ಪೂರ್ಣಗೊಂಡು ಕಾರ್ಯಾದೇಶ ನೀಡಿ ಎರಡು ವರ್ಷಗಳು ಕಳೆದರೂ ಕಾಮಗಾರಿ ಅನುಷ್ಠಾನಗೊಂಡಿಲ್ಲ. ಬೀದಿ ದೀಪಗಳು ಇಲ್ಲದ ಕಾರಣ, ದಾಸರಹಳ್ಳಿ ವ್ಯಾಪ್ತಿಯಲ್ಲಿ ರಾತ್ರಿಯ ವೇಳೆ ರಸ್ತೆ ಅಪಘಾತ ಹಾಗೂ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿವೆ’ ಎಂದು ಅವರು ಹೇಳಿದ್ದಾರೆ.

‘ಕಾಮಗಾರಿಯನ್ನು ಆದಷ್ಟು ಬೇಗ ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಬಿಬಿಎಂಪಿ ವಿದ್ಯುತ್‌ ವಿಭಾಗದ ವತಿಯಿಂದ ಬೀದಿ ದೀಪಗಳನ್ನು ಖರೀದಿಸಲು ಸೂಕ್ತ ಅನುದಾನ ಒದಗಿಸಲು ಸಂಬಂಧಪಟ್ಟವರಿಗೆ ಸೂಚಿಸಬೇಕು’ ಎಂದು ಬಿಬಿಎಂಪಿ ಆಡಳಿತಾಧಿಕಾರಿಯವರಿಗೆ ಅವರು ಪತ್ರ ಬರೆದಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.